ಕಾವೇರಿ ನದಿ ಪಾತ್ರದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾವೇರಿ ಹೋರಾಟಗಾರರು ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟಿಸಿದರು.
ತಮಿಳುನಾಡಿಗೆ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನೀರು ಹರಿಸಲಾಗುತ್ತಿದೆ, ಆದರೂ ಸಹ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಅ.16 ರಿಂದ 31 ರವರೆಗೆ ಪ್ರತಿನಿತ್ಯ 3000 ಕ್ಯೂಸೆಕ್ ನಿರ್ವಹಿಸುವಂತೆ ಸೂಚಿಸುವ ಮೂಲಕ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕಲು ಮುಂದಾಗಬೇಕು, ಕೇಂದ್ರ ಸಚಿವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿ ಮಧ್ಯಸ್ಟಿಕೆ ವಹಿಸಲು ಒತ್ತಾಯಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆ ನೇತೃತ್ವವನ್ನು ಮುಖಂಡರಾದ ಸುನಂದ ಜಯರಾಂ, ಕನ್ನಡ ಸೇನೆ ಮಂಜುನಾಥ್, ಮಹಾಂತಪ್ಪ ಇಂಡುವಾಳು ಬಸವರಾಜ್ ಮತ್ತಿತರರು ವಹಿಸಿದ್ದರು.