ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡಬೇಕೆಂದು ಆಗ್ರಹಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ನಡೆಸುತ್ತಿರುವ ಕಾವೇರಿ ಹೋರಾಟಕ್ಕೆ ಶನಿವಾರ ಕಾಲೇಜು ವಿದ್ಯಾರ್ಥಿಗಳು ಹಾಗೂ ರೈತರು ಬೆಂಬಲ ವ್ಯಕ್ತಪಡಿಸಿದರು.
ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾ ಪಂ ವ್ಯಾಪ್ತಿಯ ಗೋಪಾಲಪುರ, ಎಚ್ ಕೋಡಿಹಳ್ಳಿ, ಕೋಡಿಹಳ್ಳಿ ಫಾರಂನ ರೈತರು ಮೆರವಣಿಗೆ ಮೂಲಕ ನಗರಕ್ಕೆ ಆಗಮಿಸಿ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು, ರೈತರು ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡುವಂತೆ ಒತ್ತಾಯಿಸಿದರು. ನಂತರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಸ್ಥಳಕ್ಕೆ ತೆರಳಿ ನಿರಂತರ ಧರಣಿಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಜಯರಾಮ್, ಪುಟ್ಟಮ್ಮ, ರಾಮಕೃಷ್ಣ, ಭಾನುಪ್ರಕಾಶ್, ಕೆ ಬೋರಯ್ಯ ನೇತೃತ್ವ ವಹಿಸಿದ್ದರು.
ವಿದ್ಯಾರ್ಥಿಗಳ ಬೆಂಬಲ
ಕಾವೇರಿ ಹೋರಾಟ ಬೆಂಬಲಿಸಿ ಮಂಡ್ಯ ವಿಶ್ವದ್ಯಾಲಯದ ಕಲಾ ವಿಭಾಗದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಮೆರವಣಿಗೆ ನಡೆಸಿದರು. ಕಾಲೇಜು ಆವರಣದಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಹೋರಾಟಕ್ಕೆ ಸಾಥ್ ನೀಡಿದರು. ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹೋರಾಟದಲ್ಲಿ ರೈತ ಹಿತರಕ್ಷಣಾ ಸಮಿತಿಯ ಮುಖಂಡರಾದ ಸುನಂದ ಜಯರಾಂ, ಕೆ ಬೋರಯ್ಯ, ಕನ್ನಡಪರ ಸಂಘಟನೆಯ ಮುಖಂಡ ಎಸ್.ನಾರಾಯಣ್, ದಸಂಸ ಎಂ ವಿ ಕೃಷ್ಣ, ಫಯಾಜ್ ಮತ್ತಿತರರಿದ್ದರು.