ಡೆಂಘೀ ಜ್ವರ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ನಿಯಂತ್ರಣ ಕ್ರಮಗಳ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಜೊತೆ ಸಹಕಾರ ನೀಡಬೇಕೆಂದು ಜಿಲ್ಲಾ ಕುಷ್ಟರೋಗ ನಿರ್ಮೂಲನ ಅಧಿಕಾರಿ ಡಾ. ಸೋಮಶೇಖರ್ ಹೇಳಿದರು.
ಶ್ರೀರಂಗಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ,ಮೆದುಳು ಜ್ವರ, ಆನೆಕಾಲು ರೋಗಗಳ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ “ಡೆಂಘೀ ರಥಕ್ಕೆ”ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಎನ್ ಕೆ ವೆಂಕಟೇಶ್ ಮಾತನಾಡಿ, ಡೆಂಘೀ ರಥವು ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಮುಂದಿನ ಮೂರು ದಿನಗಳಲ್ಲಿ ಸಂಚರಿಸಲಿದ್ದು ಆಯಾ ಆರೋಗ್ಯ ಕೇಂದ್ರಗಳ ಕ್ಷೇತ್ರ ಸಿಬ್ಬಂದಿಗಳು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ, ಲಕ್ಷಣಗಳು, ಹರಡುವಿಕೆ ವಿಧಾನ ಹಾಗೂ ಮುಂಜಾಗ್ರತಾ ಕ್ರಮಗಳು, ಚಿಕಿತ್ಸೆ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಿದ್ದಾರೆ. ಜನರು ಈ ಡೆಂಘೀ ರಥದ ಪ್ರಯೋಜನ ಪಡೆದು ಅರಿವು ಹೆಚ್ಚಿಸಿಕೊಂಡು ರೋಗಗಳ ನಿಯಂತ್ರಣಕ್ಕಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಜಿ ಬಿ ಹೇಮಣ್ಣ, ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್, ಗಂಜಾಂ ಮಂಜುನಾಥ್ ಉಪಸ್ಥಿತರಿದ್ದರು