ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಷ್ಟಾಚಾರದ ಆಪಾದನೆ ಮಾಡಿ ಆಣೆ ಪ್ರಮಾಣಕ್ಕೆ ಕೂಗುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ 14 ತಿಂಗಳ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮಾಡಿಲ್ಲ ಎನ್ನುವುದಾದರೆ ದೇವರ ಹೆಸರಿನಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸವಾಲು ಹಾಕಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018 ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವರು ವರ್ಗಾವಣೆ ಸೇರಿದಂತೆ ಆಡಳಿತದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಎಂದು ಆಣೆ ಮಾಡುವುದಾದರೆ ಧರ್ಮಸ್ಥಳ ಸೇರಿದಂತೆ ಯಾವುದೇ ದೇವಾಲಯಕ್ಕೆ ಬಂದು, ನಾವು ಕೂಡ ಪ್ರಮಾಣ ಮಾಡಲು ನಾವು ಸಿದ್ಧರಿದ್ದೇವೆ ಎಂದು ಪಂಥಹ್ವಾನ ನೀಡಿದರು.
ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ
ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ, ಕಾಂಗ್ರೆಸ್ ಪಕ್ಷದಲ್ಲಿ 50 ಮಂದಿ ಮುಖ್ಯಮಂತ್ರಿ ಆಗುವ ಅರ್ಹತೆ ಹೊಂದಿದ್ದಾರೆ, ಎಲ್ಲವನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ ಎದುರಿಸಲು ಕೇಂದ್ರದಿಂದ ಅನುದಾನ ಕೋರಿದ್ದೇವೆ, ಎರಡು ಮೂರು ದಿನ ಕಾಯೋಣ, ಕೇಂದ್ರ ಸ್ಪಂದಿಸಲಿದೆ ಎಂಬ ನಂಬಿಕೆ ಇದೆ, ಈ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.
ಆಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ
ಆಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ, ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ, ಈ ಬಗ್ಗೆ ಆ ಪಕ್ಷಗಳ ನಾಯಕರು, ಶಾಸಕರಿಗೆ ಒಪ್ಪಿಗೆ ಇಲ್ಲ, ಇತ್ತು ಹೊಂದಾಣಿಕೆ ಆಗಿಲ್ಲ, ಗೊಂದಲದ ಪರಿಸ್ಥಿತಿ ಇದೆ ಹಾಗಾಗಿ ಆಪರೇಷನ್ ಕಮಲದ ಗುಮ್ಮ ಬಿಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಮತದಾರರ ಒಲವು ಇದ್ದು, ಅದನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಇದಾಗಿದೆ ಎಂದರು.
ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಿಗೆ ರಾಜಕೀಯ ಚರ್ಚೆ ಬೇಕಾಗಿದೆ, ರಾಜ್ಯ ಸರ್ಕಾರ ನಾಲ್ಕುವರೆ ತಿಂಗಳಲ್ಲಿ ಅಭಿವೃದ್ಧಿ ಕೆಲಸದ ಜೊತೆಗೆ ಅನುದಾನವನ್ನು ಬಿಡುಗಡೆ ಮಾಡಿದೆ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಕಾವೇರಿ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಗಣಿಸಿದೆ. ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಇದನ್ನು ಸಹಿಸಲು ಪ್ರತಿಪಕ್ಷಗಳಿಗೆ ಆಗುತ್ತಿಲ್ಲ ಹಾಗಾಗಿ ಇಲ್ಲಸಲ್ಲದ ರಾಜಕಾರಣಕ್ಕೆ ಮುಂದಾಗಿದ್ದಾರೆ ತಿರುಗೇಟು ನೀಡಿದರು.