ಕರ್ನಾಟಕ ರಾಜ್ಯದ ಬರ ಪರಿಸ್ಥಿತಿಗನುಗುಣವಾಗಿ ಕೇಂದ್ರ ಸರ್ಕಾರ ಪರಿಹಾರವನ್ನು ವಿತರಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಬೇಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ತಿಳಿಸಿದರು.
ಮಂಡ್ಯದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಿಸಿದೆ. ಎಸ್ಡಿಆರ್ಎಫ್ ಖಾತೆಯಲ್ಲಿ ಕೋಟ್ಯಾಂತರ ರೂ. ಹಣವಿದ್ದು, ಅದನ್ನು ಏಕೆ ಬಳಕೆ ಮಾಡಿಕೊಳ್ಳುತ್ತಿಲ್ಲ. ಮೊದಲು ಈ ಹಣವನ್ನು ವಿತರಿಸಲು ಕ್ರಮ ವಹಿಸಬೇಕೆಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ರಾಜ್ಯಾದ್ಯಂತ ವಿಪರೀತ ಮಳೆ, ಅತಿ ವೃಷ್ಠಿಯಾಗಿತ್ತು. ಏಕಾಂಗಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮನೆ ಕಳೆದುಕೊಂಡವರಿಗೆ 5 ಲಕ್ಷ, ಹಾನಿಗೊಳಗಾದವರಿಗೆ 1, 2 ಲಕ್ಷ ಪರಿಹಾರ ನೀಡಿದ್ದಾರೆ, ಕೋವಿಡ್ ಸಂದರ್ಭದಲ್ಲೂ ಅಸಂಘಟಿತ ಕಾರ್ಮಿಕರಿಗೆ 860 ಕೋಟಿ ಸೇರಿದಂತೆ ವಿವಿಧ ರೀತಿಯ ಪರಿಹಾರ ವಿತರಣೆ ಮಾಡಿದ್ದಾರೆ. ಅವರು ಎಂದೂ ಕೇಂದ್ರದ ಅನುದಾನಕ್ಕಾಗಿ ಕಾಯಲಿಲ್ಲ. ಇಂತಹ ವ್ಯವಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಡಿಬಿಟಿ ಮೂಲಕ ಪರಿಹಾರ
ರಾಜ್ಯದ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ನೌಕರರಿಂದ ರಾಜ್ಯದಲ್ಲಿರುವ ಬರ ಪರಿಸ್ಥಿತಿ ಬಗ್ಗೆ ವರದಿ ಪಡೆದಿರುವ ಸರ್ಕಾರ ಅದನ್ನು ಸಮರ್ಥವಾಗಿ ಎದುರಿಸಿ, ಮೊದಲು ತನ್ನಲ್ಲಿರುವ ಹಣವನ್ನು ಬಿಡುಗಡೆ ಮಾಡಲಿ, ನಂತರ ಕೇಂದ್ರದ ಕಡೆಗೆ ಕೈ ತೋರಿಸಲಿ. ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಡಿಬಿಟಿ ಮೂಲಕ ಪ್ರತಿಯೊಬ್ಬ ಫಲಾನುಭವಿಗಳಿಗೂ ವಿತರಣೆ ಮಾಡುತ್ತದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಕೇಂದ್ರದಿಂದ ಬರ ಪರಿಹಾರದ ಹಣ ಬಂದಿಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸುವ ಕಾರ್ಯದಲ್ಲಿ ಮುಖ್ಯಮಂತ್ರಿಗಳು ನಿರತರಾಗಿದ್ದಾರೆ. ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ದೂರಿದರು.
ಪತ್ರ ಬರೆದು ಗೊಂದಲ
ಲೋಪಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗೆ ಪತ್ರ ಬರೆದು ಬೇರೆ ಬೇರೆ ವಿಚಾರಗಳ ಬಗ್ಗೆ ಉತ್ತರ ಕೊಡಿ ಎಂದು ಕೇಳುವ ಮೂಲಕ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾವೇರಿ ವಿಚಾರದಲ್ಲೂ ಸಹ ಸರ್ಕಾರ ಎಡವಿದೆ ಎಂದ ಅವರು, ಅ. 7ರಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀರು ಬಿಡುವಂತೆ ಆದೇಶ ಮಾಡಿತ್ತು. 8ರಂದು ನೀರು ಹರಿಸಿದರು. ಆದರೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಯಿತು ಎಂದು ಟೀಕಿಸಿದರು.
ಗೋಷ್ಠಿಯಲ್ಲಿ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಉಪಸ್ಥಿತರಿದ್ದರು.