ಚಿತ್ರದುರ್ಗ ಜಿಲ್ಲೆಯ ರೈತ ಮುಖಂಡ, ಸಾಮಾಜಿಕ ಹೋರಾಟಗಾರ ಟಿ.ನುಲೇನೂರು ಎಂ.ಶಂಕರಪ್ಪ ಅವರು ನಿಧನರಾಗಿದ್ದಾರೆ.
68 ವರ್ಷ ವಯಸ್ಸಿನ ಟಿ.ನುಲೇನೂರು ಎಂ.ಶಂಕರಪ್ಪ, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಸೋಮವಾರ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಎಂ.ಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಗ್ರಾಮ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರಿನಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಂ.ಶಂಕ್ರಪ್ಪ ಅವರು ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಅಧ್ಯಕ್ಷರಾಗಿ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಈ ಮೊದಲು ಅವರು ರೈತ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.
ರೈತರ ಪರವಾಗಿ ಜಿಲ್ಲೆಯಲ್ಲಿ ಗಟ್ಟಿ ಧ್ವನಿಯಾಗಿದ್ದ ಶಂಕರಪ್ಪಅವರು ಭದ್ರಾ ಮೇಲ್ದಂಡೆ ಹೋರಾಟದ ಅನುಷ್ಟಾನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅತೀವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ರೈತರಿಗೆ ಬರ ಪರಿಹಾರ ಸೇರಿದಂತೆ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇದಲ್ಲದೆ ಕಳೆದ 20 ವರ್ಷಗಳಿಂದ ಚಿತ್ರದುರ್ಗ ನಗರದಲ್ಲಿ ಪತ್ರಿಕಾ ವಿತರಕರಾಗಿಯೂ ಸೇವೆ ಸಲ್ಲಿಸಿದ್ದಾರೆ.