ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಯುವ ರೈತನೊಬ್ಬನನ್ನು ಬಲಿ ಪಡೆದಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಕಟ್ಟೆಕ್ಯಾತನಹಳ್ಳಿ ಸಮೀಪದ ಬೆಳತೂರು ಗ್ರಾಮದ ಬಳಿಯಲ್ಲಿ ನಡೆದಿದೆ.
ರವಿಕುಮಾರ್(43) ಸಾವಿಗೀಡಾದ ಪ್ರಗತಿಪರ ಯುವ ರೈತ.
ರವಿಕುಮಾರ್ ರಾಜೇನಹಳ್ಳಿ ಗ್ರಾಮದಲ್ಲಿ ವಾಸವಿದ್ದು, ಗುರುವಾರ ಮದ್ಯಾಹ್ನ ಎರಡು ಗಂಟೆಯ ಸಮಯದಲ್ಲಿ ಕಟ್ಟೆಕ್ಯಾತನಹಳ್ಳಿ ಬೆಳತೂರು ಬಳಿ ಇರುವ ತಮ್ಮ ಜಮೀನಿನಲ್ಲಿ ಹುಲ್ಲು ಕೊಯ್ಯಲು ತೆರಳಿದ್ದ ಸಮಯದಲ್ಲಿ ಟಿಸಿಯಿಂದ ವಿದ್ಯುತ್ ತಂತಿ ತುಂಡಾಗಿರುವುದನ್ನು ಗಮನಿಸದೇ ಬದುವಿನ ಮೇಲೆ ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಂಜೆಯಾದರೂ ಮನೆಗೆ ಬಾರದ ರವಿಕುಮಾರ್ ರವರನ್ನು ಹುಡುಕಿಕೊಂಡು ತನ್ನ ಭಾವಮೈದುನ ಜಮೀನಿನ ಬಳಿ ಹುಡುಕಾಟ ನಡೆಸಿದ್ದಾರೆ ಅಲ್ಲಿ ರವಿಕುಮಾರ್ ಶವ ಪತ್ತೆಯಾಗಿದೆ.
ಪ್ರಕರಣವು ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು ಚೆಸ್ಕಾಂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದ್ದು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.
ಮೃತರ ನಿಧನಕ್ಕೆ ಶಾಸಕ ಹೆಚ್.ಟಿ.ಮಂಜು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮ್, ಟಿಎಪಿಸಿಎಂಎಸ್ ನಿರ್ದೇಶಕ ಹೆಚ್.ಟಿ.ಲೋಕೇಶ್, ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್, ಬೂಕನಕೆರೆ ಹೋಬಳಿ ಅಧ್ಯಕ್ಷ ನಂದೀಶ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.