ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಗ್ರಾ ಪಂ ಅಧ್ಯಕ್ಷ ಚಲುವರಾಜ್ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಪಿ ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಶ್ರೀರಂಗಪಟ್ಟಣ ಹಾಗೂ ಪಾಲಹಳ್ಳಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಡಿಯಲ್ಲಿ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸ್ನೇಹಜೀವಿ ಸಾಂಸ್ಕೃತಿಕ ಯುವಕ ಸಂಘ ತಡಗವಾಡಿ ಇವರಿಂದ ತಾಯಿ ಮಗುವಿನ ಆರೋಗ್ಯ, ತಾಯಿ ಕಾರ್ಡ್ ಮಹತ್ವ, ಹೆಣ್ಣು ಭ್ರೂಣಹತ್ಯೆ ತಡೆಗಟ್ಟುವ ಕುರಿತು, ಬಾಲ್ಯ ವಿವಾಹ, ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಮುಖ್ಯ ಮಂತ್ರಿ ಜನಾರೋಗ್ಯ ಯೋಜನೆ ಆರೋಗ್ಯ ಕರ್ನಾಟಕ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳು, ಈ ಸಂಜೀವಿನಿ ಮುಂತಾದ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಬೀದಿನಾಟಕ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾ ಪಂ ಸದಸ್ಯರಾದ ಯೋಗೇಶ್, ನಂದಿನಿ, ಸಣ್ಣ ಕಾಳಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಮಿತ, ಆಶಾ ಕಾರ್ಯಕರ್ತೆ ಪಾರ್ವತಿ , ನಾಗರತ್ನ, ಬಿಂದು,ಅಂಗನವಾಡಿ ಕಾರ್ಯಕರ್ತೆ ರಾಜಕುಮಾರಿ ಕಲಾತಂಡದ ಮುಖ್ಯಸ್ಥರಾದ ತಡಗವಾಡಿ ನಾಗರಾಜ್ ಹಾಗೂ ತಂಡದ ಸದಸ್ಯರು ಮತ್ತು ಸಾರ್ವಜನಿಕರು ಹಾಜರಿದ್ದರು.