ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಂಡ್ಯ ತಾಲ್ಲೂಕು ವ್ಯಾಪ್ತಿಯ ಗೋಪಾಲಪುರ, ಬಿ.ಹೊಸೂರು, ದೊಡ್ಡಗರುಡನಹಳ್ಳಿ ಹಾಗೂ ಬಸರಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಗೋಪಾಲಪುರ ಗ್ರಾಮಕ್ಕೆ ಭೇಟಿ ನೀಡಿ ಮೀನುಗಾರಿಕೆ ಇಲಾಖೆಯ ಕಟ್ಟಡ ದುರಸ್ಥಿ ಕಾಮಗಾರಿ ಹಾಗೂ ಬಸರಾಳು ಗ್ರಾಮದ ಪಶುಸಂಗೋಪನೆ ಕಟ್ಟಡ ದುರಸ್ಥಿ ಕಾಮಗಾರಿ ಪರಿಶೀಲಿಸಿ, ತುರ್ತಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬಿ.ಹೊಸೂರು ಕಾಲೋನಿಗೆ ಭೇಟಿ ನೀಡಿ ಮಹಾತ್ಮಗಾಂಧಿ ನರೇಗಾ ಯೋಜನೆ ಹಾಗೂ ಜೆಜೆಎಂ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿ ಪರಿಶೀಲಿಸಿದರು. ನಂತರ ಬಿ.ಹೊಸೂರು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶಾಲಾ ಕಟ್ಟಡದ ದುರಸ್ಥಿ ಮತ್ತು ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.
ದೊಡ್ಡಗರುಡನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಪಂಚಾಯತ್ ಅನುದಾನದಡಿಯ ಚರಂಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ಬಸರಾಳು ಗ್ರಾಮದ ಸರ್ಕಾರಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.
ಕೋಡಿಕೊಪ್ಪಲು ಹಾಗೂ ಮೊಳೆಕೊಪ್ಪಲು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿ ಮತ್ತು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಉತ್ತಮ ಗುಣಮಟ್ಟದ ನಲ್ಲಿಗಳು, ಪೈಪ್ ಗಳನ್ನು ಅಳವಡಿಸುವಂತೆ ಹಾಗೂ ಪೈಪ್ ಲೈನ್ ಅಳವಡಿಕೆಯ ಆಳದ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದರು.