ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಒದಗಿಸುವುದಕ್ಕೆ ಪೂರಕವಾಗಿ ನಿಯಮಗಳನ್ನು ರೂಪಿಸಲಾಗಿದ್ದು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿರುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಶಾಸಕ ಮಧು ಜಿ.ಮಾದೇಗೌಡ ಅವರು ಸಹಕಾರ ಸಂಘಗಳ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಕುರಿತು ವಿಧಾನಪರಿಷತ್ತಿನಲ್ಲಿ ಕೇಳಿದ ಚುಕ್ಕೆ ಗುತ್ತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ನೌಕರರಿಗೆ ಸೇವಾ ಭದ್ರತೆ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ಗೆ ತಿದ್ದುಪಡಿ ಮಾಡಲಾಗಿದ್ದು ಕಲಂ 128(ಎ) ಅನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದರು.
ಮಂಡ್ಯ ನಗರಸಭೆ ಮೇಲ್ದರ್ಜೆಗೆ: ಪ್ರಸ್ತಾವನೆ ಸ್ವೀಕೃತವಾದಲ್ಲಿ ಪರಿಶೀಲನೆ
ಶಾಸಕ ಮಧು ಜಿ.ಮಾದೇಗೌಡರ ಮಂಡ್ಯ ನಗರವನ್ನು ಮಂಡ್ಯ ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಕುರಿತು ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಆದರೆ, ಮಂಡ್ಯ ಜಿಲ್ಲಾಧಿಕಾರಿರವರು ಮಂಡ್ಯ ನಗರಸಭೆಯನ್ನು ಮೇಲ್ದರ್ಜೆಗೇರಿಸುವುದಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯರವರಿಗೆ ಸಲ್ಲಿಸಿದಲ್ಲಿ ಮತ್ತು ಪೌರಾಡಳಿತ ನಿರ್ದೇಶಕರಿಂದ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರನ್ವಯ ಅರ್ಹ ಪ್ರಸ್ತಾವನೆಯು ಸೂಕ್ತ ಶಿಫಾರಸಿನೊಂದಿಗೆ ಸರ್ಕಾರದಲ್ಲಿ ಸ್ವೀಕೃತವಾದಲ್ಲಿ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪ್ರತಿ ಗ್ರಾಮ ಪಂಚಾಯಿತಿಗೊಂದರಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ತೆರೆಯುವ ಬಗ್ಗೆಯೂ ಪ್ರಕ್ರಿಯೆಗಳು ನಡೆದಿವೆ. ಪ್ರಸ್ತುತ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಒಟ್ಟು 4733 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿವೆ. ರಾಜ್ಯದಲ್ಲಿ ಒಟ್ಟು 6084 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ 15617 ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ ಎಂದು ಮಾಹಿತಿ ನೀಡಿದ್ದಾರೆ.