ವರದಿ: ಪ್ರಭು ವಿ ಎಸ್
ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡುವುದಾಗಿ ಶಾಸಕ ಉದಯ್ ಹೇಳಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಪಕ್ಷಕ್ಕೆ ಅನುಕೂಲವಾಗುವುದಾದರೆ ತಾವು ಸ್ವಾಗತ ಮಾಡಲಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಮುಂದಿನ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಯಾರೆಂಬುವುದನ್ನು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದು ಯಾರೇ ಅಭ್ಯರ್ಥಿಯಾದರು ಅವರ ಗೆಲುವಿಗೆ ನಿರಂತರವಾಗಿ ಶ್ರಮಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಅಭ್ಯರ್ಥಿ ವಿಚಾರದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದು ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಹೈಕಮಾಂಡ್ ಹಂತದಲ್ಲಿ ಮಾತುಕತೆ ನಡೆದಿರುವುದು ತಮ್ಮ ಗಮನಕ್ಕೆ ಬಂದಿಲ್ಲವೆಂದ ಅವರು, ಜಿಲ್ಲೆಯಲ್ಲಿ ಪಕ್ಷವೂ ಸದೃಢವಾಗಿದ್ದು ಯಾರೇ ಅಭ್ಯರ್ಥಿಯಾದರೂ ಅವರ ಗೆಲುವು ಶತಸಿದ್ಧ. ಪಕ್ಷವು ಯಾರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಅವರ ಗೆಲುವಿಗೆ ಶಕ್ತಿಮೀರಿ ಶಾಸಕರು, ಮುಖಂಡರು ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದರು.
ಕಾಂಗ್ರೆಸ್ ಗೆಲುವು ನಿಶ್ಚಿತ
ಮಾಜಿ ಮುಖ್ಯಮಂತ್ರಿ ಎಚ್. ಡಿ .ಕುಮಾರಸ್ವಾಮಿ ರವರು ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ಯಾರೇ ಸ್ಪರ್ಧೆ ಮಾಡಿದರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತವಾಗಿದ್ದು ಕುಮಾರಸ್ವಾಮಿ ಅವರು ಇಲ್ಲಿ ಗೆಲ್ಲುವುದಕ್ಕೆ ಆಗುವುದಿಲ್ಲ,
ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಕುಟುಂಬಕ್ಕೂ ತಲುಪುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾರೇ ಮೈತ್ರಿ ಅಭ್ಯರ್ಥಿಯಾದರು ಜಿಲ್ಲೆಯ ಮತದಾರರು ಪ್ರಭುದ್ಧ, ಬುದ್ದಿವಂತರಾಗಿದ್ದು ಉತ್ತಮ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆಂದರು. ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಬೇಕೆಂಬ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಸಿದ ಶಾಸಕ ಪ್ರತಿಯೊಬ್ಬರು ಅವರವರ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಸಮರ್ಥರಿದ್ದು ಈ ಸಂಬಂಧ ಪಕ್ಷದ ಹೈಕಮಾಂಡ್ ತೀರ್ಮಾನ ತೀರ್ಮಾನ ಕೈಗೊಳ್ಳಲಿದೆ ಎಂದರು.
ಈ ವೇಳೆ ಪುರಸಭೆ ಸದಸ್ಯೆ ಬಿ ಸಿ ಸರ್ವಮಂಗಳ ,ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ ಉದಯಶಂಕರ್, ಡಾ ಶ್ರೀನಿವಾಸ್, ಪಶು ಪರಿವೀಕ್ಷಕ ಉಮೇಶ್, ಮುಖಂಡರಾದ ಅರುಣ್ ಕುಮಾರ್, ದಯಾನಂದ, ಸುಪ್ರೀತ್, ನವೀನ್, ಹಾಜರಿದ್ದರು