ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್ ನಲ್ಲಿ ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು, ಆಹಾರ,ಆರೋಗ್ಯ, ಶಿಕ್ಷಣ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್ ಹೆಚ್ ಎಂ, ಐಸಿಪಿಎಸ್, ಎಸ್ ಎಸ್ ಎ, ಎಂ ಎನ್ ಆರ್ ಇ ಜಿ ಯೋಜನೆಗಳನ್ನು ಖಾಯಂ ಮಾಡುವ ಮೂಲಕ ಯೋಜನೆಯ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು, ಯೋಜನೆಯ ನೌಕರರಿಗೆ ಕನಿಷ್ಠ ವೇತನ ನಿವೃತ್ತಿ ಸೌಲಭ್ಯ ಕಲ್ಪಿಸಿ ನೌಕರರು ಎಂದು ಪರಿಗಣಿಸಬೇಕೆಂಬು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಮಂಡ್ಯದಲ್ಲಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಮಂಡ್ಯನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಮೆರವಣಿಗೆ ಹೊರಟು ಸಂಸದರ ಕಚೇರಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟಿಸಿದರು.
ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು ನಾಲ್ಕು ಗಂಟೆಯಿಂದ ಆರು ಗಂಟೆ ಎಂದು ಬದಲಾಯಿಸಬೇಕು, ಬಿಸಿಯೂಟ ನೌಕರರಿಗೆ ಪರಿಹಾರ ನೀಡದೆ ನಿವೃತ್ತಿ ಮಾಡಬಾರದು, ಈಗಾಗಲೇ ನಿವೃತ್ತಿಯಾಗಿರುವವರಿಗೆ ಇಡಿಗಂಟು ನೀಡಬೇಕು, ಅಕ್ಷರ ದಾಸೋಹ ಯೋಜನೆಯನ್ನು ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಸಬೇಕು, ಹಲವು ವರ್ಷದಿಂದ ವೇತನ ಹೆಚ್ಚಳ ಮಾಡದಿರುವುದರಿಂದ ಕೂಡಲೇ ವೇತನ ಹೆಚ್ಚಿಸಬೇಕು, ವಿದ್ಯುತ್, ರೈಲ್ವೆ ಸೇರಿ ಸಾರ್ವಜನಿಕ ವಲಯ ಖಾಸಗೀ ಕರಣ ನಿಲ್ಲಿಸಬೇಕು, 29 ಕಾರ್ಮಿಕ ಕಾನೂನುಗಳ ಸಂಹಿತೆ ಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕರ ಪರ ನೀತಿ ಜಾರಿಗೊಳಿಸಬೇಕು, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ ವಾರ್ಷಿಕ ನಿವ್ವಳ ಆದಾಯದ ಶೇ 3 ರಷ್ಟು ಅನುದಾನವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು ಎಂದು ಒತ್ತಾಯಿಸಿದರು.
ಇ-ಶ್ರಮ್ ಗುರುತಿನ ಚೀಟಿ ಪಡೆದಿರುವ ವಸಂಘಟಿತ ಕಾರ್ಮಿಕ ಕುಟುಂಬ ವರ್ಗದವರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಯೋಜನೆ ಜಾರಿಗೊಳಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಬೇಕು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿಯಂತ್ರಿಸಬೇಕು, ಕೆಲಸದ ಅವಧಿ ಹೆಚ್ಚಳ ಮಾಡಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈಬಿಡಬೇಕು, ನ್ಯಾಯಾಲಯದ ತೀರ್ಪಿನಂತೆ ಬಿಸಿ ಊಟ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಜುಟಿ ಕಾಯ್ದೆ ಜಾರಿಗೊಳಿಸಬೇಕು ಅದೇ ರೀತಿ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದು ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ಕಾತರಿಪಡಿಸಬೇಕು, ರಸ ಗೊಬ್ಬರ, ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತ ನೀತಿ ಕೈ ಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ 6,000 ರೂ ಗೆ ವೇತನ ಹೆಚ್ಚಳ ಮಾಡಿ ನಿವೃತ್ತಿ ಸೌಲಭ್ಯ ಕಲ್ಪಿಸಬೇಕು, ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್ ಡಿ ಎಂ ಸಿ ಗೆ ವರ್ಗಾವಣೆ ಮಾಡಿರುವುದನ್ನು ವಾಪಸ್ ಪಡೆಯಬೇಕು, 2022 ರಿಂದ ನಿವೃತ್ತಿಯಾಗಿರುವರಿಗೆ 1 ಲಕ್ಷ ಇಡುಗಂಟು ಕೊಡಬೇಕು. ಕೆಲಸದ ಅವಧಿಯಲ್ಲಿ ಮೃತರಾದರೆ 25 ಲಕ್ಷ ಪರಿಹಾರ ನೀಡಬೇಕು ಸರಿ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಸಂಘಟನೆಯ ನಾಗರಾಜು, ಸಿ,ಕುಮಾರಿ, ಕೃಷ್ಣೆಗೌಡ, ಮಹದೇವಮ್ಮ, ಎ.ಬಿ ಶಶಿಕಲಾ, ಎಂ.ಲಕ್ಷ್ಮಿ, ವೆಂಕಟಲಕ್ಷ್ಮಿ, ಪುಟ್ಟಮ್ಮ, ಶೋಭಾ, ವನಜಾಕ್ಷಿ, ಸುಜಾತ ನೇತೃತ್ವ ವಹಿಸಿದ್ದರು.