Wednesday, October 23, 2024

ಪ್ರಾಯೋಗಿಕ ಆವೃತ್ತಿ

ಸ್ಕಿಜೋಫ್ರೇನಿಯಾ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ : ಎ.ಎಂ ನಳಿನಿಕುಮಾರಿ

ಸ್ಕಿಜೋಫ್ರೇನಿಯಾವೊಂದು ತೀವ್ರತರವಾದ ಮಾನಸಿಕ ಕಾಯಿಲೆಯಾಗಿದ್ದು, ಈ ಕಾಯಿಲೆ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎ.ಎಂ ನಳಿನಿಕುಮಾರಿ ತಿಳಿಸಿದರು.

ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ಭರವಸೆಯನ್ನು ಬೆಸೆಯೋಣ ಎಂಬ ಘೋಷಣೆಯಡಿ ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾಯಿಲೆಗೆ ಯಾವುದೇ ಚಿಕಿತ್ಸೆಯಿಲ್ಲ ಎಂದು ಭಯ ಪಡೆಯಬಾರದು. ವಿಜ್ಞಾನ ಮತ್ತು ತಂತ್ರಜ್ಞಾನದಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಅನೇಕ ಹೊಸ ಸಂಶೋಧನೆಗಳು ಆಗಿದ್ದು, ಪ್ರತಿಯೊಂದು ಕಾಯಿಲೆಗೂ ಇಂದು ಔಷಧಿ, ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಅನಗತ್ಯವಾಗಿ ಯಾವುದೇ ರೀತಿಯ ಮೂಢನಂಬಿಕೆ, ಕಂದಾಚಾರಗಳಿಗೆ ಒಳಗಾಗಬಾರದೆಂದು ಅವರು ತಿಳಿಸಿದರು.

ಕಾಯಿಲೆಯ ನಿಯಂತ್ರಣದಲ್ಲಿ ಎಲ್ಲರೂ ಸಹಕರಿಸುವ ನಿಟ್ಟಿನಲ್ಲಿ ಮತ್ತು ಯುವಕರಲ್ಲಿ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ ನಡೆಸಲಾಯಿತು ಎಂದರು.

ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಡಾ. ಕೆ.ಜಿ.ಭವಾನಿಶಂಕರ್ ರವರು ಮಾತನಾಡಿ ಖಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಿ. ಗುಣಮುಖರಾಗಿ ಅವರು ಸಹ ಸಾಮಾನ್ಯ ಮನುಷ್ಯರಂತೆ ಜೀವನ ಮಾಡಬಹುದು ಎಂದರು.

ಸ್ಕಿಜೋಫ್ರೀನಿಯಾ ರೋಗಿಗಳಿಗೆ ಹೊರ ರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಾಗೂ ಚಿಕಿತ್ಸಾಲಯಗಳ ಸಾಧಾರಣ ವೈದ್ಯರ ನೆರವಿನಿಂದ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದರು.

ವಿನಾಕಾರಣ ನಗುವುದು, ಅಳುವುದು, ಒಬ್ಬರೆ ಮಾತನಾಡಿಕೊಳ್ಳುವುದು, ಕಾಲ್ಪನಿಕ ಧ್ವನಿ ಕೇಳಿಸುವುದು, ಕಾರಣವಿಲ್ಲದೆ ಅನುಮಾನ ಪಡುವುದು ಮತ್ತು ಹೆಚ್ಚು ಹೆಚ್ಚು ಮಾದಕ ವಸ್ತುಗಳ ಸೇವನೆ ಮಾಡುವುದು ಈ ರೋಗದ ಲಕ್ಷಣಗಳಾಗಿವೆ.

ಆದ್ದರಿಂದ ನಿಯಮಿತ ಔಷಧಿಗಳು, ಆಪ್ತ ಸಮಾಲೋಚನೆ, ಚಿಕಿತ್ಸೆ ಅನುಸರಣೆ ಮತ್ತು ಪುನರ್ವಸತಿಗಳಿಂದ ಈ ಕಾಯಿಲೆಯಿಂದ ಗುಣಮುಖ ಆಗುವ ಸಾಧ್ಯತೆ ಇರುತ್ತದೆ ಎಂದರು.

ಸ್ಕೀಜೊಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ಅರ್ಥವಿಲ್ಲದ ಮತ್ತು ಅಸಂಭದ್ದ ಮಾತುಗಳು, ಸೂಕ್ತವಲ್ಲದ ಭಾವನೆಗಳನ್ನು ವ್ಯಕ್ತಪಡಿಸುವುದು, ಕಾರಣವಿಲ್ಲದೆ ಅಳುವುದು, ನಗುವುದು ಮತ್ತು ಕೋಪ ಮಾಡಿಕೊಳ್ಳುವುದು, ಭಾವನೆಗಳೇ ಇಲ್ಲದ ಹಾಗೆ ಇರುವುದು, ತನ್ನ ಲೋಕದಲ್ಲಿ ಒಂಟಿಯಾಗಿರುವುದು ಹಾಗೂ ಇಲ್ಲದ ವಾಸನೆ ಈ ಲಕ್ಷಣಗಳನ್ನು ಪ್ರಾರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಅನಿಲ್ ಕುಮಾರ್ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಧರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ ಎಂ ಎನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ್ ಎಂ.ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ರಾಜಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!