ಭ್ರೂಣ ಹತ್ಯೆ ಬಗ್ಗೆ ಕಠಿಣ ಕಾನೂನು ಇದ್ದರೂ, ಜನತೆಗೆ ಕಾನೂನಿನ ಬಗ್ಗೆ ಅರಿವಿಲ್ಲ. ಆಗಾಗಿ ಜನತೆಯಲ್ಲಿ ಅರಿವು ಮೂಡಿಸುವುದೇ ಮುಖ್ಯವಾದ ಮತ್ತು ಸೂಕ್ತವಾದ ಶಾಶ್ವತ ಪರಿಹಾರವಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಹೆಣ್ಣುಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ವಿರೋಧಿಸಿ ಹಾಗೂ ಬಾಲ್ಯ ವಿವಾಹ ನಿಷೇಧದ ಬಗ್ಗೆ ಮದ್ದೂರು ತಾಲ್ಲೂಕಿನ ದೊಡ್ಡ ಅರಸಿನಕೆರೆಯಲ್ಲಿ ನಡೆದ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆ ತಡೆಯಲು ಪೊಲೀಸ್ ಇಲಾಖೆಗೆ ಜನತೆಯ ಸಹಕಾರ ಬೇಕು. ಸಾರ್ವಜನಿಕರು ನೀಡುವ ಮಾಹಿತಿ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳಲಾಗುವುದು. ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ ಹಾಗೂ ಇನ್ನಿತರೆ ಯಾವುದೇ ಹತ್ಯೆ ಕಂಡು ಬಂದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್ ಸೇರಿದಂತೆ ಪ್ರಗತಿಪರರು, ಮಹಿಳಾ ಸಂಘಟಕರು ಉಪಸ್ಥಿತರಿದ್ದರು.