ಬಣ ರಾಜಕೀಯದಿಂದ ಪತನವಾಗುವ ಹಂತ ತಲುಪಿದ್ದ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇದೆ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್ ರವಾನಿಸಿದ್ದಾರೆ.
ಶಿಮ್ಲಾದಲ್ಲಿ ಗುರುವಾರ ಸಂಜೆ ವಿಕ್ರಮಾದಿತ್ಯ ಸಿಂಗ್ ಹಾಗೂ ಪ್ರತಿಭಾ ಸಿಂಗ್ ಅವರೊಂದಿಗೆ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್, “ಎಲ್ಲವೂ ಸರಿಯಿದೆ. ಸರ್ಕಾರ 5 ವರ್ಷಗಳ ಕಾಲ ಆಡಳಿತ ನಡೆಸಲಿದೆ. ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲಾಗಿದೆ” ಎಂದು ಎಂದಿದ್ದಾರೆ.
“ರಾಜ್ಯಸಭಾ ಚುನಾವಣೆಯ ಸೋಲಿನ ಹೊಣೆಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ವಹಿಸಿಕೊಂಡಿದ್ದಾರೆ. ಕೆಲ ವೈಫಲ್ಯಗಳನ್ನು ನಮ್ಮ ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ನಾವು ಪಿಸಿಸಿ ಅಧ್ಯಕ್ಷರು, ಸಿಎಂ ಮತ್ತು ಪ್ರತಿಯೊಬ್ಬ ಶಾಸಕರ ಜೊತೆ ಮಾತನಾಡಿದ್ದೇವೆ. ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸಲು ಐದಾರು ಜನರ ಸಮಿತಿ ರಚಿಸುತ್ತೇವೆ” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.
#WATCH | Shimla, Himachal Pradesh: Congress observer DK Shivakumar says, “…Our CM accepted that some failure has happened. But it will not continue further. We have spoken to all the MLAs personally. We have spoken to the PCC president, CM. One round of discussion will happen… pic.twitter.com/VHwzx991xC
— ANI (@ANI) February 29, 2024
“>
“ನಾವು ಶಾಸಕರನ್ನು ಹಿಡಿದಿಡುವಲ್ಲಿ ವಿಫಲವಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದರಲ್ಲಿ ಗುಪ್ತಚರದ ವೈಫಲ್ಯವೂ ಇತ್ತು. ಅಲ್ಲದೆ, ಬಿಜೆಪಿ ನಮ್ಮ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂಬುವುದು ನಮಗೆ ತಿಳಿದಿರಲಿಲ್ಲ” ಎಂದು ಸಿಎಂ ಸುಖ್ವಿಂದರ್ ಸಿಂಗ್ ಹೇಳಿದ್ದಾರೆ.
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರಿಗೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಆಗುತ್ತಿಲ್ಲ ಎಂದು ಕೆಲ ಶಾಸಕರು ಆರೋಪಿಸಿದ್ದರು. ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ, ಸಚಿವ ವಿಕ್ರಮಾದಿತ್ಯ ಸಿಂಗ್, “ಸುಖ್ವಿಂದರ್ ಸಿಂಗ್ ನನ್ನ ತಂದೆಗೆ ಅವಮಾನ ಮಾಡಿದ್ದಾರೆ” ಎಂದು ಆರೋಪಿಸಿ ರಾಜೀನಾಮೆ ನೀಡಿದ್ದರು.
ಈ ಬೆನ್ನಲ್ಲೇ ಸರ್ಕಾರ ಪತನಗೊಳ್ಳುವ ಆತಂಕ ಎದುರಾಗಿತ್ತು. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಕೂಡ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿ ಹಬ್ಬಿತ್ತು.
ಈ ನಡುವೆ ಹೈಕಮಾಂಡ್ ಸೂಚನೆಯಂತೆ ಶಿಮ್ಲಾಗೆ ತೆರಳಿದ ಡಿ.ಕೆ ಶಿವಕುಮಾರ್ ಅಸಮಾಧಾನಿತರನ್ನು ಸಮಾಧಾನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದ ನಡುವೆ ನಿನ್ನೆ 15 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಸ್ಪೀಕರ್ ಅಮಾನತ್ತು ಮಾಡಿದ್ದರು. ಇಂದು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ 6 ಮಂದಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.