ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಸಂವಿಧಾನ ಧಮನ ಮಾಡುತ್ತಿದ್ದಾರೆ, ಇದು ಜನತೆಗೆ ಗೊತ್ತಾಗುತ್ತಿಲ್ಲ. ಹಿಂದುಳಿದ ಮತ್ತು ದಲಿತರಿಗೆ ಭಾರೀ ಅನ್ಯಾಯವಾಗಿದೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಬಿ.ಸೋಮಶೇಖರ್ ಆತಂಕ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಮಂಡ್ಯ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿದ್ದು, ಪ್ರಜಾಪ್ರಭುತ್ವ ಉಳಿಯಬೇಕಾದರೆ ಎನ್ಡಿಎ ಅಭ್ಯರ್ಥಿಗಳನ್ನು ಜನತೆ ಸೋಲಿಸಬೇಕೆಂದು ಕರೆ ನೀಡಿದರು.
ಲಕ್ಷಾಂತರ ಕೋಟಿ ರೂ.ಗಳ ಹಗರಣ
ಚುನಾವಣಾ ಬಾಂಡ್ ಹಾಗೂ ಪಿ.ಎಂ ಕೇರ್ ಹೆಸರಿನಲ್ಲಿ ಲಕ್ಷಾಂತರ ಕೋಟಿ ರೂ.ಗಳ ಹಗರಣ ನಡೆದಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ನೇಮಕ ಮಾಡಿ ತನಿಖೆ ನಡೆಸಬೇಕು. 2019ರ ಪುಲ್ವಾಮ ದಾಳಿಯಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ಪ್ರತಿ ಬಾರಿಯೂ ಮೋಸದಿಂದ ಚುನಾವಣೆ ಗೆಲ್ಲುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
2014ರಲ್ಲಿ ಅಧಿಕಾರಕ್ಕೆ ಬರಬೇಕಾದರೆ ಬಿಜೆಪಿಯವರು 2 ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಅಂದು ಶೇ. 34ರಷ್ಟಿದ್ದ ನಿರುದ್ಯೋಗ ಇಂದು ಶೇ. 65ಕ್ಕೆ ಹೆಚ್ಚಳವಾಗಿದೆ. ಪ್ರತಿ ಬಿಪಿಎಲ್ ಕುಟುಂಬದವರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದರು, ಹಾಕಿದರೆ? ಈರೀತಿಯ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ಆದ್ದರಿಂದ ಎನ್ಡಿಎ ಅಭ್ಯರ್ಥಿಗಳನ್ನು ಸೋಲಿಸಬೇಕೆಂದು ಹೇಳಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಜಿಲ್ಲಾ ವಕ್ತಾರ ಸಿ.ಎಂ. ದ್ಯಾವಪ್ಪ ಹಾಜರಿದ್ದರು.