ಪದವೀಧರರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಜೂ.13 ರಂದು ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ನನಗೊಂದು ಅವಕಾಶ ನೀಡಿ ಎಂದು ಪಕ್ಷೇತರ ಅಭ್ಯರ್ಥಿ ಎನ್.ಎಸ್. ವಿನಯ್ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,4 ಜಿಲ್ಲೆಯಲ್ಲಿ ದಕ್ಷಿಣ ಪದವೀಧರರ ಪತ್ತಿನ ಸಹಕಾರ ಬ್ಯಾಂಕ್ ಸ್ಥಾಪನೆ , ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗ ಭರ್ತಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ತರುವುದು, N.P.S ರದ್ದು ಗೊಳಿಸಿ ಸಂವಿಧಾನದ ಮೂಲಭೂತ ಹಕ್ಕು ಆಗಿರುವ O.P.S ಪುನಃ ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದು. ಸರ್ಕಾರಿ ಪ್ರೌಢಶಾಲೆ ಶಿಕ್ಷಕರು ಮತ್ತು ಸರ್ಕಾರಿ ಭಡ್ತಿ ಉಪನ್ಯಾಸಕರ ವೇತನ ತಾರತಮ್ಯ ಸಮಸ್ಯೆ ಬಗೆಹರಿಸುವ ಕ್ರಮ ಕೈಗೊಳ್ಳುತ್ತೇನೆ. G.P.T ಶಿಕ್ಷಕರ ಸಮಸ್ಯೆ ಬಗೆಹರಿಸಲು ಒತ್ತು ನೀಡುತ್ತೇನೆ ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಇರುವ ದೈಹಿಕ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸದೆ ಮುಂದುವರೆಸುವುದು ಹಾಗೂ ದೈಹಿಕ ಶಿಕ್ಷಕರ ಹೊಸ ನೇಮಕಾತಿ ಮಾಡುವ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. 1987ರ ನಂತರದ ಖಾಸಗಿ ಪದವಿ ಕಾಲೇಜುಗಳು ಹಾಗೂ ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳುತ್ತೇನೆ. 95-96ರ ನಂತರದ ಕನ್ನಡ ಶಾಲೆಗಳಿಗೆ ವೇತನಾನುದಾನಕ್ಕೆ ಒಳಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದಾಗಿ ತಿಳಿಸಿದರು.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣದ ಸಂದರ್ಭದಲ್ಲಿ ಸರ್ಕಾರ ಜಾರಿಗೆ ತಂದಿರುವ ಅವೈಜ್ಞಾನಿಕ ನೀತಿಗಳನ್ನು ಸಡಿಲ ಗೊಳಿಸುವುದು. ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಹಾಗೂ ಯುಜಿಸಿ ನಿಯಮದಂತೆ ಗೌರವಧನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ.
ಅತಿಥಿ ಶಿಕ್ಷಕರಿಗೆ ಗೌರವಧನ ಹೆಚ್ಚುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದರು. ಗೋಷ್ಠಿಯಲ್ಲಿ ಅಜಯ್ ಕುಮಾರ್, ಗುರುಮಲ್ಲೇಶ್, ನವೀನ್,ಶ್ರೀನಿವಾಸ್ ಉಪಸ್ಥಿತರಿದ್ದರು.