ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಈ.ಸಿ.ನಿಂಗರಾಜ್ ಗೌಡರಿಗೆ ಟಿಕೆಟ್ ನೀಡಲಾಗಿದೆ.
ಈಗಾಗಲೇ ಈ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಪಾಲಾಗಿದೆ.ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ಕೊಪ್ಪದ ವಿವೇಕಾನಂದ ಸಾಕಷ್ಟು ಪ್ರಯತ್ನ ನಡೆಸಿದ್ದರು. ಅದರಲ್ಲೂ ಎರಡು ಬಾರಿ ದಕ್ಷಿಣ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆ.ಟಿ.ಶ್ರೀಕಂಠೇಗೌಡ ಈ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿಯಾಗಲು ತೀವ್ರ ಪ್ರಯತ್ನ ನಡೆಸಿದ್ದರು.ನನಗೆ ಟಿಕೆಟ್ ಪಕ್ಕಾ ಎಂದು ಈಗಾಗಲೇ ಹಲವೆಡೆ ಸಭೆ ನಡೆಸಿದ್ದರು. ಈ ಮಧ್ಯೆ ಕೊಪ್ಪದ ವಿವೇಕಾನಂದ ಕೂಡ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಯಾಗಲು ಟಿಕೆಟ್ ಗಾಗಿ ಲಾಬಿ ನಡೆಸಿದ್ದರು.ಆದರೆ ಇವರಿಬ್ಬರಿಗೂ ಟಿಕೆಟ್ ಕೈ ತಪ್ಪಿದ್ದು,ಬಿಜೆಪಿಯ ಈ.ಸಿ.ನಿಂಗರಾಜ್ ಗೌಡರಿಗೆ ಟಿಕೆಟ್ ದಕ್ಕಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವ ಅನುಭವಿ ಮರಿತಿಬ್ಬೇಗೌಡರ ಎದುರು ಮೊದಲ ಬಾರಿಗೆ ಈ.ಸಿ.ನಿಂಗರಾಜ್ ಗೌಡ ಸ್ಪರ್ಧೆ ಮಾಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಮರಿತಿಬ್ಬೇಗೌಡರ ಎದುರು ಯಾವ ತಂತ್ರ ಹೆಣೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.