ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಹೇಳಿದರು.
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ “ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು” ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗಂಡು ಹೆಣ್ಣು ನಾಣ್ಯದ ಎರಡು ಮುಖಗಳು ಇದನ್ನು ಅರಿತು ಎಲ್ಲರೂ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಲಿಂಗ ಅನುಪಾತದಲ್ಲಿ ಏರುಪೇರಾಗಿ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಮಹಿಳೆಯರ ಮೇಲೆ ಅತ್ಯಾಚಾರ, ವಿವಾಹ ವಿಚ್ಛೇದನ ಕುಟುಂಬ ಹದಗೆಡುತ್ತದೆ. ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದಲ್ಲಿ ಗಂಡು ಮಕ್ಕಳಿಗೆ ಮದುವೆಯ ಕೊರತೆ ಉಂಟಾಗುತ್ತದೆ. ಆ ಕಾರಣ ಲಿಂಗ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಆರೋಗ್ಯದ ದೃಷ್ಟಿಯಿಂದ ಸರಿಯಲ್ಲ. ಗಂಡು ಮಗುವಿಗೆ ತೋರುವಷ್ಟು ಕಾಳಜಿ ಹೆಣ್ಣು ಮಗುವಿಗೂ ತೋರಬೇಕೆಂದು ಅವರು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಸೂತಿ ತಜ್ಞ ವೈದ್ಯರಾದ ಡಾ.ಕುಮಾರ್ ಮಾತನಾಡಿ, ಗರ್ಭಿಣಿಯರು ನಿಗದಿತ ಅವಧಿಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ರಕ್ತ ಹೀನತೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಕಾರ್ಯಾಗಾರದಲ್ಲಿ ತಾಲ್ಲೂಕು ಪ್ರಭಾರಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ, ಶುಶ್ರೂಷಣಾಧಿಕಾರಿ ಸುಧಾ,ಆಶಾ ಕಾರ್ಯಕರ್ತೆಯರಾದ ಚಾಂದನಿ, ಮೀನಾ, ಹೇಮಾವತಿ, ಗರ್ಭಿಣಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು