ಮೈಸೂರು ಸಂಸ್ಥಾನದ ಅಭಿವೃದ್ದಿಯ ಹರಿಕಾರ, ಮಂಡ್ಯ ಜಿಲ್ಲೆಯ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜನ್ಮ ದಿನಾಚರಣೆಯನ್ನು ಜೂ.4ರಂದು ಆಚರಿಸಲಾಗುವುದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗಹಳ್ಳಿ ವೆಂಕಟೇಶ್ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ವಡಿಯವರು ಆಧುನಿಕ ಮೈಸೂರಿನ ನಿರ್ಮಾತೃಗಳಾಗಿದ್ದಾರೆ. ಶಿಕ್ಷಣ, ಆರೋಗ್ಯ ,ನೀರಾವರಿ, ಕೈಗಾರಿಕೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ, ಅವರ ಜನ್ಮದಿನವನ್ನು ಎಲ್ಲಾ ಸಂಘಟನೆಗಳು, ಸಂಘ ಸಂಸ್ಥೆಗಳು ರಾಜ್ಯಾದ್ಯಂತ ಆಚರಿಸಬೇಕೆಂದು ಮನವಿ ಮಾಡಿದರ.
ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿ, ಗೆಜ್ಜೆಪೂಜೆಯಂತಹ ಅನಿಷ್ಟ ಪದ್ದತಿಗೆ ಒಡೆಯರ್ ಅವರು ತಿಲಾಂಜಲಿ ನೀಡಿದರು. ದೇಶದಲ್ಲಿ ಜನಪರ, ಅಭಿವೃದ್ಧಿಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ನುಡಿದರು.
ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹಾಗಾಗಿ ಅವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಮಂಡ್ಯ ಜಿಲ್ಲೆಯ ಬರಡು ಭೂಮಿಯನ್ನು ಹಸಿರು ಮಾಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ. ತಮ್ಮ ಕುಟುಂಬದವರ ಒಡವೆಗಳನ್ನು ಮಾರಿ ಕನ್ನಂಬಾಡಿ ಕಟ್ಟೆಯನ್ನು ನಿರ್ಮಿಸಿ ಕೃಷಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.
ನೀರಾವರಿ, ಕೈಗಾರಿಕೆ ಒಡೆಯರ್ ಅವರ ಕೊಡುಗೆಯಾಗಿದೆ. ಇಡೀ ಏಷ್ಯಾದಲ್ಲಿಯೇ ಶಿಂಷಾದಲ್ಲಿ ವಿದ್ಯುತ್ ಯೋಜನೆಯನ್ನು ಪ್ರಥಮ ಬಾರಿಗೆ ಜಾರಿಗೆ ತಂದರು.. ಶಾಲೆ , ಕಾಲೇಜು, ವಿಶ್ವವಿದ್ಯಾನಿಲಯ, ಆಸ್ಪತ್ರೆ ಹೀಗೆ ನೂರಾರು ಯೋಜನೆಗಳನ್ನು ಜಾರಿಗೆ ತಂದು ಜನೋಪಯೋಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಮತ್ತು ಇತರ ಸಂಘ ಸಂಸ್ಥೆಗಳು ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲು ಆದೇಶಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಅವರು ಈ ಬಗ್ಗೆ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ. ಆದ ಕಾರಣ ಎಲ್ಲಾ ಸಂಘಟನೆಗಳು, ಸಂಘ ಸಂಸ್ಥೆಗಳು ,ಗ್ರಾಮ ಪಂಚಾಯಿತಿಗಳು ಸ್ವಯಂ ಪ್ರೇರಿತವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಸರಳ ರೀತಿಯಲ್ಲಿ ಆಚರಿಸಬೇಕು ಎಂದು ಮನವಿ ಮಾಡಿದರು .
ಗೋಷ್ಠಿಯಲ್ಲಿ ಸಚಿನ್, ಮಂಜು, ಶಿವಣ್ಣ, ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.