ಬಿತ್ತನೆ ಬೀಜಗಳ ದುಪ್ಪಟ್ಟು ಬೆಲೆ ಏರಿಕೆ, ಸಮರ್ಪಕವಾಗಿ ಬರ ಪರಿಹಾರ ವಿತರಣೆ ಮಾಡುವಲ್ಲಿ ವಿಫಲ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ರೈತಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡರು ಇಲ್ಲಿನ ಕೆ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮೆರವಣಿಗೆ ಹೊರಟು ದಾರಿಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯ ಕಾರ್ಯದರ್ಶಿ ಹೆಚ್ ಆರ್ ಅಶೋಕ್ ಕುಮಾರ್ ಮಾತನಾಡಿ, ಬರದ ಭವಣೆಯಿಂದ ತತ್ತರಿಸಿರುವ ಜಿಲ್ಲೆಯ ರೈತರಿಗೆ ಉಚಿತವಾಗಿ ಬಿತ್ತನೆ ಬೀಜಗಳನ್ನು ನೀಡಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ ಬಿತ್ತನೆ ಬೀಜಗಳ ದರವನ್ನು ದುಪ್ಪಟ್ಟು ಏರಿಕೆ ಮಾಡಿ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಕಿಡಿಕಾರಿದರು.
ಬರ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮೂರುವರೆ ಸಾವಿರ ಕೋಟಿ ಹಣವನ್ನು ಈ ವರೆಗೂ ಸಂಕಷ್ಟಕ್ಕೆ ಒಳಗಾದ ರೈತರಿಗೆ ಬಿಡುಗಡೆ ಮಾಡದ ಸಿಎಂ ಸಿದ್ದರಾಮಯ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಹಿಂದಿನ ಬಿಜೆಪಿ ಸರ್ಕಾರ ವಿ ಸಿ ನಾಲೆಯ ಆಧುನೀಕರಣಕ್ಕಾಗಿ 3.500 ಕೋಟಿ ಹಣ ಬಿಡುಗಡೆ ಮಾಡಿದ್ದು ಈ ಕಾಮಗಾರಿಯನ್ನು ಎಂಪಿ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ನೀಡಿದ್ದು ಸರಿಯಾಗಿ ಕಾಮಗಾರಿ ಮಾಡದೆ ಕಳಪೆ ಕೆಲಸದ ಮೂಲಕ ಸರ್ಕಾರ ಸಾರ್ವಜನಿಕ ಹಣದ ಕೊಳ್ಳೆ ಹೊಡೆಯುತ್ತಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೃಷಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರಾದ ಅಶೋಕ್ ಜಯರಾಮ್, ಜೋಗಿಗೌಡ, ತಾಲೂಕು ಬಿಜೆಪಿ ಅಧ್ಯಕ್ಷರಾದ ಎಂ ಎನ್ ಕೃಷ್ಣ, ರೈತಮೋರ್ಚಾ ಅಧ್ಯಕ್ಷ ಶಶಿ, ಮುಖಂಡರಾದ ಮುನಿರಾಜು, ಕೆ ಸಿ ನಾಗೇಗೌಡ, ಪುರಸಭಾ ಸದಸ್ಯರಾದ ಪುಟ್ಟಸ್ವಾಮಿ, ರವಿ ಹೆಚ್ ಬಸವರಾಜು, ಮತ್ತಿತರರು ಈ ವೇಳೆ ಹಾಜರಿದ್ದರು.