ತಮಗೆ ಸಂಬಂಧಿಸಿದ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬಾಲಿವುಡ್ ಗಾಯಕ ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಮತ್ತು ಸೋದರ ಮಾವ ಮಧುಸೂದನ್ ರೆಡ್ಡಿ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಐಎಎಸ್ ಅಧಿಕಾರಿ ರಾಜ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಅಲಿ ಅವರ ದೂರು ಆಧರಿಸಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರು ನೀಡಿರುವ ಬಗ್ಗೆ ಲಕ್ಕಿ ಅಲಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅದರಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿಯಾದ ಮನೋಹನ್ ಎಂಬುವರೂ ಸಹ ಹಗರಣದಲ್ಲಿ ಷಾಮೀಲಾಗಿದ್ದಾರೆಂದು ಅವರು ಆರೋಪಿಸಿದ್ದಾರೆ.
ಗಾಯಕ ಮತ್ತು ಹಿರಿಯ ಐಎಎಸ್ ಅಧಿಕಾರಿಯ ನಡುವೆ ಟ್ರಸ್ಟ್ ಒಡೆತನದ ಭೂಮಿಯ ವಿಷಯವು ದೀರ್ಘಕಾಲದಿಂದ ಇದೆ. ಕೆಲವು ವರ್ಷಗಳ ಹಿಂದೆ, ಲಕ್ಕಿ ಅಲಿ ಸಾಮಾಜಿಕ ಮಾಧ್ಯಮದಲ್ಲಿ ಸ್ಥಳೀಯ ಪೊಲೀಸರು ಐಎಎಸ್ ಅಧಿಕಾರಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ವಿಷಯದ ಬಗ್ಗೆ ಮಧ್ಯಪ್ರವೇಶಿಸುವಂತೆ ಉನ್ನತ ಅಧಿಕಾರಿಗಳನ್ನು ವಿನಂತಿಸಿದ್ದರು. ‘ಭೂ ಮಾಫಿಯಾ’ ಭೂಮಿಯನ್ನು ಅಕ್ರಮವಾಗಿ ಕಸಿದುಕೊಳ್ಳಲು ಪಿತೂರಿ ನಡೆಸಿದೆ ಎಂದು ಅವರು ಹೇಳಿದ್ದಾರೆ. ಈ ಆಸ್ತಿ ಯಲಹಂಕದ ಕಂಚೇನಹಳ್ಳಿ ಪ್ರದೇಶದಲ್ಲಿದೆ ಎಂದು ವರದಿಯಾಗಿದೆ.
2022ರಲ್ಲೂ ದೂರು ದಾಖಲು
ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಆ ಕುರಿತಂತೆ ಸರಣಿ ಟ್ವೀಟ್ ಗಳನ್ನು ಮಾಡಿದ್ದ ಅವರು, ಆ ಟ್ವೀಟ್ ಗಳನ್ನು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು. ಆ ಟ್ವೀಟ್ ಗಳಲ್ಲಿ ಅವರು, ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.
ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರು ಸರ್ಕಾರದ ನಿಮಯಗಳನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಫೂಲ್ ನಿರ್ಮಾಣ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ನಾಯಕ ಸಾರಾ ಮಹೇಶ್ ದೂರಿದ್ದರು. ಇದೀಗ ಮತ್ತೆ ಭೂಕಬಳಿಕೆ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಹೆಸರು ಮುನ್ನೆಲೆಗೆ ಬಂದಿದೆ.