ರಾಮನಗರ ಮತ್ತು ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಹಿಂದಿರುವ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್.ಆದರೆ ಅವರ ಕನಸಿನ ಕೂಸು ರಾಮನಗರ ಮತ್ತು ಕನಕಪುರ ಮೆಡಿಕಲ್ ಕಾಲೇಜಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರದ ಎನ್.ಎಂ.ಸಿ (ರಾಷ್ಟ್ರೀಯ ವೈದ್ಯಕೀಯ ಆಯೋಗ) ಅನುಮತಿ ನಿರಾಕರಿಸಿದೆ.
ತಾಂತ್ರಿಕ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ಕಾರಣದಿಂದ ಅನುಮತಿ ನಿರಾಕರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಎನ್.ಎಂ.ಸಿ ಹೇಳುತ್ತಿದೆ.
ಆದರೆ ಈ ಎರಡೂ ಮೆಡಿಕಲ್ ಕಾಲೇಜುಗಳಿಗೆ ಅನುಮತಿ ನಿರಾಕರಿಸುವುದರ ಹಿಂದೆ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಕಡು ವೈರಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೈವಾಡವಿದೆ ಎಂದೇ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಡಿ.ಕೆ.ಶಿವಕುಮಾರ್ ಅವರು ರಾಮನಗರಕ್ಕೆ ಮಂಜೂರಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ಮುಂದಾಗಿದ್ದರು. ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.ಈ ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿಕೊಂಡಿದ್ದರು. ಒಂದು ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ಎನ್ಎಂಸಿ ಮತ್ತು ಎಂಸಿಐ ವಿಧಿಸಿರುವ ಮಾನದಂಡ ಕಡ್ಡಾಯವಾಗಿ ಪಾಲನೆ ಮಾಡಬೇಕು. ಆದರೆ ಈ ಎರಡು ಮೆಡಿಕಲ್ ಕಾಲೇಜುಗಳು ತಾಂತ್ರಿಕ ಮತ್ತು ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಹೇಳಿ ಅನುಮತಿ ನೀಡಲು ನಿರಾಕರಿಸಿದೆ.
ಈ ವರ್ಷದ ಸೆಪ್ಟೆಂಬರ್ ನಲ್ಲಿ ರಾಮನಗರ ಮೆಡಿಕಲ್ ಕಾಲೇಜು ಕಾರ್ಯ ನಿರ್ವಹಿಸಲಿದೆ ಎಂದು ಎಲ್ಲೆಡೆ ಮಾತು ಕೇಳಿ ಬರುತ್ತಿತ್ತು.ಇದರ ನಡುವೆಯೇ ರಾಮನಗರ ಮತ್ತು ಕನಕಪುರ ಮೆಡಿಕಲ್ ಕಾಲೇಜಿಗೆ ಅನುಮತಿ ನಿರಾಕರಣೆ ಮಾಡಿರುವುದರ ಹಿಂದೆ ಎಚ್.ಡಿ.ಕುಮಾರಸ್ವಾಮಿ ನೆರಳಿದೆ ಎಂದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಒಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಜಿದ್ದಾಜಿದ್ದಿಗೆ ಎರಡು ಮೆಡಿಕಲ್ ಕಾಲೇಜುಗಳು ಬಲಿಯಾಗಿದ್ದು ದುರದೃಷ್ಟಕರ ವಿಚಾರವಾಗಿದೆ.