ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿಗೆ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ಶುಕ್ರವಾರ ವಶಕ್ಕೆ ಪಡೆದರು.
ಮಂಡ್ಯ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಸಂಜಯ ವೃತ್ತಕ್ಕೆ ಬಂದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಪೊಲೀಸ್ ವಾಹನದಲ್ಲಿ ಪೆರೇಡ್ ಮೈದಾನಕ್ಕೆ ಕರೆದುಕೊಂಡು ಹೋದರು.
ಮುಡಾ ಹಗರಣದ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದ ಬಿಜೆಪಿ ಪಕ್ಷದ ನಾಯಕರನ್ನು ಪೊಲೀಸ್ ಬಲಪ್ರಯೋಗಿಸಿ ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅವರು ಅನೇಕ ತಪ್ಪು ಮಾಹಿತಿಗಳನ್ನು ನೀಡುತ್ತಿದ್ದು, ಮುಖವಾಡ ಕಳಚಿ ಬಿದ್ದಿದೆ. ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳು ಜಮೀನನ್ನು ಕಬಳಿಕೆ ಮಾಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ಬಂಡತನಕ್ಕೆ ಬಿದ್ದು ತಾವು ಮಾಡಿರುವ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಅಶೋಕ್ ಜಯರಾಮ್, ಸಾದೊಳಲು ಸ್ವಾಮಿ, ವಿವೇಕ್, ಸಿ ಟಿ ಮಂಜುನಾಥ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.