ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ನಿತ್ಯ ಸಚಿವ ಕೆ ವಿ ಶಂಕರಗೌಡರ 109ನೇ ಜನ್ಮ ದಿನಾಚರಣೆ, 2024ನೇ ಸಾಲಿನ ರಾಜ್ಯಮಟ್ಟದ ಕೆವಿ ಶಂಕರಗೌಡ ಮತ್ತು ಕೆ ಎಸ್ ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜಸೇವಾ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಜು.15ರಂದು ಬೆಳಿಗ್ಗೆ 11 ಗಂಟೆಗೆ ಪಿ ಇಎಸ್ ಇಂಜಿನಿಯರಿಂಗ್ ಕಾಲೇಜಿನ ನಿತ್ಯ ಸಚಿವ ಕೆ ವಿ ಶಂಕರಗೌಡ ತರಬೇತಿ ಮತ್ತು ಉದ್ಯೋಗ ಕೇಂದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಿಇಟಿ ಸಂಸ್ಥೆಯ ಡಾ.ರಾಮಲಿಂಗಯ್ಯ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಮಟ್ಟದ ರಂಗಭೂಮಿ ಪ್ರಶಸ್ತಿಗೆ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ, ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿಗೆ ನಾಗಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಅಂದು ಪಿಇಟಿ ಅಧ್ಯಕ್ಷ ಕೆ ಎಸ್ ವಿಜಯ್ ಆನಂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ವಿಧಾನಸೌಧದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾ ಶಂಕರ್ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು .
ಗೋಷ್ಠಿಯಲ್ಲಿ ಪಿಇಟಿ ಕಾರ್ಯದರ್ಶಿ ಹೆಚ್.ಎನ್ .ಶಿವಪ್ರಸಾದ್ ಉಪಸ್ಥಿತರಿದ್ದರು.