ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯದ ಗುತ್ತಲು ಬಡಾವಣೆಯ ರವಿಕುಮಾರ್ ಹಾಗೂ ಪವಿತ್ರ ದಂಪತಿಗಳ ಪುತ್ರಿ ನಿಶ್ಚಿತಾ ಅವರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ 50 ಸಾವಿರ ರೂ.ಗಳ ಸಹಾಯಧನ ನೀಡಿ ಮಾನವೀಯತೆ ಮರೆದಿದ್ದಾರೆ.
ಇತ್ತೀಚೇಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಜನತಾದರ್ಶನದಲ್ಲಿ ನಿಶ್ಚಿತಾ ಅವರು ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಸಚಿವರು ಆರ್ಥಿಕ ಸಹಾಯ ನೀಡಿದ್ದಾರೆ. ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಅವರು ಸಚಿವರ ಪರವಾಗಿ ನೊಂದ ಕುಟುಂಬವನ್ನು ಭೇಟಿ ಮಾಡಿ, ಸಹಾಯಧನ ವಿತರಿಸಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮುಖಂಡ ಬಿ.ಆರ್. ರಾಮಚಂದ್ರು ಮಾತನಾಡಿ, ಜನತಾದರ್ಶನ ಕಾರ್ಯಕ್ರಮದಲ್ಲಿ ನಿಶ್ಚಿತಾ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದದ್ದು ಕುಮಾರಣ್ಣ ಅವರ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಐವತ್ತು ಸಾವಿರ ಸಹಾಯಧನ ಕಳಿಸಿ, ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳುವಂತೆ ಸೂಚನೆ ನೀಡಿದ್ದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭಾ ಸದಸ್ಯ ನಾಗೇಶ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಬೋರೇಗೌಡ, ಜೆಡಿಎಸ್ ಮುಖಂಡರಾದ ಮಂಜುನಾಥ್, ರಾಜು ಮತ್ತಿತರರಿದ್ದರು.