ಮಂಡ್ಯ ಜಿಲ್ಲೆಯ ಜೀವನಾಡಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಅಣೆಕಟ್ಟೆಯು ಭರ್ತಿಯಾಗಿರುವ ಕಾರಣ ಜಲಾಶಯದಿಂದ 52,000 ಕ್ಯೂಸೆಕ್ ಗಿಂತ ಹೆಚ್ಚು ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಹಲವು ಸ್ಥಳಗಳು ಭಾಗಶಃ ಜಲಾವೃತವಾಗಿವೆ.
ಕಾವೇರಿ ನದಿಯ ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಗೊಂಡಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಸಿದ್ದತೆ ಮಾಡಿಕೊಂಡಿದ್ದ ರೈತರಿಗೆ ಸಂಕಷ್ಟ ತಂದೊಡ್ಡಿದೆ.
ಪ್ರಸ್ತುತ ಅಣೆಕಟ್ಟೆಗೆ 60,016 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು , ಅಣೆಕಟ್ಟೆಯಲ್ಲಿ 123.20 ಅಡಿ (ಗರಿಷ್ಠ 124.80) ಸಂಗ್ರಹವಾಗಿದೆ. ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 52,020 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ.
ಮಜಾಗೃತಾ ಕ್ರಮವಾಗಿ ಸಾರ್ವಜನಿಕರು ಕಾವೇರಿ ನದಿಗಿಳಿಯದಂತೆ ಎಚ್ಚರಿಕೆ ವಹಿಸಿ, ನದಿ ತೀರ ಪ್ರದೇಶಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.