ರಾಜ್ಯ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿಯದೆ ಸಚಿವ ಸಂಪುಟದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಕೈಗೊಂಡಿರುವ ತೀರ್ಮಾನವನ್ನು ವಾಪಸ್ ಪಡೆಯದೆ ಜಾರಿಗೆ ತರಬೇಕು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಆಗ್ರಹ ಪಡಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಉದ್ಯೋಗ ಕನ್ನಡಿಗರ ಜನ್ಮಸಿದ್ಧ ಹಕ್ಕಾಗಿದೆ. ಸರೋಜಿನಿ ಮಹಿಷ ವರದಿ ಜಾರಿಗೆ ತಂದರೆ ಯಾವುದೇ ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿ ಕಾರ್ಪೊರೇಟ್ ಕಂಪನಿಗಳಲ್ಲಿ ಮೀಸಲಾತಿ ಕುರಿತಂತೆ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಕಾರ್ಪೊರೇಟ್ ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಇದರಿಂದಾಗಿ ಸಂಪುಟದಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಬ್ರೇಕ್ ಬಿದ್ದಿದೆ. ಆದಕಾರಣ ಮುಖ್ಯಮಂತ್ರಿಗಳು ಈ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ತಾಕೀತು ಮಾಡಿದರು.
ದಲಿತ ಸಂಘರ್ಷ ಸಮಿತಿಯ ಟಿ.ಡಿ.ಬಸವರಾಜು ಮಾತನಾಡಿ, ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ .ಆದರೆ ಇಲ್ಲಿಯವರೆಗೂ ಸರಕಾರಗಳು ಬಂದಿದೆ ಹೋಗಿದೆ. ಈ ವರದಿಯ ಬಗ್ಗೆ ಮಾತ್ರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನು ವಾಪಸ್ ಪಡೆದರೆ ಅದನ್ನು ಖಂಡಿಸುವುದಾಗಿ ತಿಳಿಸಿದರಲ್ಲದೆ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಉಮ್ಮಡಹಳ್ಳಿ ನಾಗೇಶ್, ಜೋಸೆಫ್ ರಾಮು, ಪುಟ್ಟರಾಜು, ಕೆಂಪಯ್ಯ, ಉಮ್ಮಡಹಳ್ಳಿ ಉಮೇಶ್, ಅಂಕಯ್ಯ ಸೇರಿದಂತೆ ಇತರರಿದ್ದರು.