Friday, October 18, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ| ಚೊಂಬು ಪ್ರದರ್ಶಿಸಿ ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ವಿಶೇಷ ಅನುದಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯನಗರದಲ್ಲಿ ಖಾಲಿ ಚೊಂಬು ಪ್ರದರ್ಶಿಸಿ ಶನಿವಾರ ಪ್ರತಿಭಟಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಮಂಡ್ಯನಗರದ ಸಂಜಯ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ, ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ವಿಶೇಷ ಅನುದಾನ ನೀಡದೆ ಅನ್ಯಾಯ ಮಾಡಿದೆ, ಅಧಿಕಾರದ ಕುರ್ಚಿ ಉಳಿಸಿಕೊಳ್ಳಲು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಿದೆ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರಲಾಗಿದೆ ಎಂದು ಕಿಡಿಕಾರಿದರು.

ನಿರ್ಮಲಾ ಸೀತಾರಾಮನ್ ವಿರುದ್ದ ಆಕ್ರೋಶ

ರಾಜ್ಯದಿಂದ ಚುನಾಯಿತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಐವರು ಕೇಂದ್ರ ಸಚಿವರು ಕರ್ನಾಟಕ ರಾಜ್ಯಕ್ಕೆ ನಿರೀಕ್ಷಿತ ಅನುದಾನ ತರವಲ್ಲಿ ವಿಫಲರಾಗಿದ್ದಾರೆ, ಕರ್ನಾಟಕ ಪ್ರತಿನಿಧಿಸುವ ರಾಜ್ಯಸಭೆ ಸಂಸದೆ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಯಾವುದೇ ನೂತನ ಕೇಂದ್ರೀಯ ಯೋಜನೆ, ನೀರಾವರಿ, ರಸ್ತೆ, ರೈಲ್ವೆ, ಇನ್ನಿತರೆಗಳ ವಿಶೇಷ ಅನುದಾನ ನೀಡದೇ ಮಲತಾಯಿ ಧೋರಣೆಯನ್ನು ಅನುಸರಿಸಿದ್ದಾರೆ,ಹಾಗಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯವನ್ನು ತೊರೆದು ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ ಪೂರ್ವದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ರಾಜ್ಯದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸಮಸ್ಯೆಗೆ ಸ್ಪಂದಿಸಲು ಮನವಿ ಮಾಡಿದ್ದರು, ಆದರೂ ಸಹ ಭದ್ರಾ ಮೇಲ್ದಂಡೆ, ಮೇಕೆದಾಟು ನೀರಾವರಿ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿಲ್ಲ. ಬಡವರು ಮತ್ತು ರೈತ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ದೂರಿದರು.

ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಪಾವತಿಸುತ್ತಿರುವ ರಾಜ್ಯ ಕರ್ನಾಟಕವಾಗಿದೆ ಆದರೂ ಸಹ ತಾರತಮ್ಯ ಮಾಡಲಾಗುತ್ತಿದೆ, ಬರ ಪರಿಹಾರ ಹಣ ನೀಡದೆ ವಿಳಂಬ ಮಾಡಿದಾಗ ಪರಿಹಾರ ಪಡೆಯಲು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕಾಯಿತು, ನ್ಯಾಯಾಲಯ ಛಿಮಾರಿ ಹಾಕಿದ ನಂತರ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನುದಾನ ಹಂಚುವಲ್ಲಿ ರಾಜ್ಯದ ಜನತೆಯನ್ನು ಸಂಪೂರ್ಣ ವಂಚಿಸಿದೆ ಎಂದು ದೂರಿದರು.

ಪಕ್ಷದ ಎಸ್ ಸಿ ಎಸ್ ಟಿ ವಿಭಾಗದ ಅಧ್ಯಕ್ಷ ಎಂ ಎನ್ ಶ್ರೀಧರ್, ಮಹಿಳಾ ಘಟಕ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ಹಾಲಹಳ್ಳಿ ರುದ್ರಪ್ಪ, ಚಿಕ್ಕಬಳ್ಳಿ ಕೃಷ್ಣ, ಶಿವನಂಜು, ಸಿ.ಆರ್ ರಮೇಶ್, ಮಾಧ್ಯಮ ವಕ್ತಾರ ಟಿ.ಎಲ್ ಕೃಷ್ಣೇಗೌಡ, ಮುಡಾ ಅಧ್ಯಕ್ಷ ನಹಿಂ, ಚಿಕ್ಕಮಂಡ್ಯ ಆನಂದ, ಸುಂಡಳ್ಳಿ ಮಂಜುನಾಥ್, ದೀಪಕ್, ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!