ಕರ್ನಾಟಕ ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಅನುಸರಿಸುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಮಂಡ್ಯ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಗಸ್ಟ್ 15ರಂದು ಕೈಗೆ ಕಪ್ಪು ಪಟ್ಟಿ ಧರಿಸಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ ಬಿ.ಶಿವಲಿಂಗಯ್ಯ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಆಗಸ್ಟ್ 15ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು, ಈ ಹೋರಾಟವನ್ನು ಬೆಂಬಲಿಸಿ ಅಂದು ಕೈಗೆ ಕಪ್ಪು ಪಟ್ಟಿ ಧರಿಸಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಸರ್ಕಾರಿ ಶಾಲೆಗಳಿಗೆ ಯಾವುದೇ ನೀತಿ ನಿಯಮಗಳಿಲ್ಲ. ಆ ಶಾಲೆಗಳಲ್ಲಿ ಇಲ್ಲದಿರುವ ಎಲ್ಲಾ ರೀತಿಯ ಕಾನೂನು ಕಟ್ಟಳೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಹೇರಲಾಗುತ್ತಿದೆ ಎಂದು ದೂರಿದರು.
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ಜನವರಿ 14, 2022ರಂದು ಹಾಗೂ ಕರ್ನಾಟಕ ರಾಜ್ಯ ಪತ್ರ ಮಾರ್ಚ್ 7.2018 ಹಾಗೂ ಮೇ 13 2018ರಂದು ಪ್ರಕಟಿಸಲಾದ ಪ್ರಕಟಣೆಗೆ ತೀರ್ಪು ನೀಡಿದೆ . ಹೊಸದಾಗಿ ಸ್ಥಾಪಿಸಬೇಕಾದ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಬೇಕಾದ ನೀತಿ ನಿಯಮಗಳನ್ನು 2018ರ ಮುನ್ನ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದು ನಡೆಸುತ್ತಿರುವ ಶಾಲೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಆದೇಶವನ್ನು ಶಿಕ್ಷಣ ಇಲಾಖೆ ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು .
ಅನುಷ್ಠಾನಕ್ಕೆ ತರಲು ಕಷ್ಟ ಸಾಧ್ಯವಾಗುವಂತಹ ಅಗ್ನಿ ಸುರಕ್ಷತೆ, ಕಟ್ಟಡ ನಕ್ಷೆ, ಕಟ್ಟಡ ಸುರಕ್ಷತೆ, ಭೂ ಪರಿವರ್ತನೆಗಳಂತಹ ಕಠಿಣ ನಿಯಮಗಳನ್ನು ಖಾಸಗಿ ಶಾಲೆಗಳ ಮೇಲೆ ಹೇರಲಾಗುತ್ತಿದೆ. ಆದ್ದರಿಂದ ಇದನ್ನು ಖಂಡಿಸಿ ಅಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹೋರಾಟದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷೆ ಸುಜಾತ ಕೃಷ್ಣ, ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಇತರರಿದ್ದರು.