ಬಾಕಿ ವಿದ್ಯುತ್ ಬಿಲ್ ಮನ್ನಾಕ್ಕೆ ಸಿಎಂಗೆ ಪತ್ರ ಬರೆದಿದ್ದ ಶಾಸಕ ದಿನೇಶ್ ಗೂಳಿಗೌಡ
ಸಂಪುಟದ ಮುಂದೆ ಕಡತ ಮಂಡಿಸಲು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ 53 ಕೋಟಿ ರೂಪಾಯಿಯನ್ನು ಮನ್ನಾ ಮಾಡುವ ಸಂಬಂಧ ಸಂಪುಟ ಸಭೆಯಲ್ಲಿ ಕಡತ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಸೂಚನೆ ಮೇರೆಗೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮೈಷುಗರ್ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಚೆಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿಗಳು, ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತರಲು ಕ್ರಮ ವಹಿಸುವಂತೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದರು.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮೈಶುಗರ್ ಸಕ್ಕರೆ ಕಾರ್ಖಾನೆ ಎಂಡಿಗೆ ಬಾಕಿ ವಿದ್ಯುತ್ ಬಿಲ್ ಸಂಬಂಧ ವಿವರವಾದ ದಾಖಲೆ ಸಹಿತ ಕಡತವನ್ನು ಸಲ್ಲಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಎಂಡಿ ಈಗ ದಾಖಲೆಯನ್ನು ಸಲ್ಲಿಸಿದ್ದು, 2024ರ ಜುಲೈ 31ರ ವರೆಗೆ ಒಟ್ಟು 53,46,34,707 ರೂಪಾಯಿ ಬಾಕಿ ಇದೆ ಎಂಬುದನ್ನು ವಿವರಿಸಿದ್ದಾರೆ.