ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.
ತಪ್ಪು ಮಾಡಿದವರ ಮೇಲೆ ಕ್ರಮ
ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿ ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು.
ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದರು.
2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ
ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.
ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.