ಮಂಡ್ಯ ನಗರಸಭೆ ಅಧ್ಯಕ್ಷರಾಗಿ ಪ್ರಕಾಶ್ ಎಂ.ವಿ.( ನಾಗೇಶ್), ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ತಮ್ಮ ಕಚೇರಿಗಳಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಮಂಡ್ಯ ನಗರಸಭೆಯ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ್ದೇನೆ. ಸಾರ್ವಜನಿಕ ಕೆಲಸಗಳಿಗೆ ದಿನದ 24 ಗಂಟೆಯೂ ಕೆಲಸ ಮಾಡುತ್ತೇನೆ. ಎಲ್ಲಾ 35 ಮಂದಿ ನಗರಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತವಾಗಿ ಮಂಡ್ಯ ನಗರದ ಅಭಿವೃದ್ಧಿಗೆ ಒತ್ತುಕೊಟ್ಟು ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಮಾತನಾಡಿ, ಜೆಡಿಎಸ್ ಪಕ್ಷವು ಪ್ರಕಾಶ್ ಅವರನ್ನು ಗುರುತಿಸಿ ಪದವಿ ನೀಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರೊಡಗೂಡಿ ನಗರದ ಅಭಿವೃದ್ಧಿಗೆ ಕೆಲಸ ಮಾಡಲಿ ಎಂದು ಹೇಳಿದರು.
ಅಧಿಕಾರ ಸ್ವೀಕರಿಸಿದ ನಾಗೇಶ್ ಹಾಗೂ ಅರುಣ್ ಕುಮಾರ್ ಅವರನ್ನು ನಗರಸಭೆ ಸದಸ್ಯರು, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅಭಿನಂದಿಸಿದರು.