ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸುವಂತೆ ಭೀಮ್ ಆರ್ಮಿ ಸೌತ್ ಇಂಡಿಯಾ ಸಂಘಟನೆಯ ಸಂಸ್ಥಾಪಕ ಸಿ ಅನ್ನದಾನಿ ಹಕ್ಕೋತ್ತಾಯ ಮಾಡಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಇತ್ತೀಚೆಗೆ ಪರಿಶಿಷ್ಟ ಜಾತಿಸ ಸಮಾಜದ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಕನಕಪುರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಒಬ್ಬರ ಮೇಲೆ ದೌರ್ಜನ್ಯ ನಡೆಸಿ ಒಂದು ಕೈಯನ್ನು ಕತ್ತರಿಸಲಾಗಿದೆ, ಮತ್ತೊಂದು ಕಡೆ ಕ್ಷೌರಿಕನ ಅಂಗಡಿಗೆ ಕ್ಷೌರ ಮಾಡಿಸಲು ಹೋಗಿದ್ದಾಗ ಕತ್ತರಿಯಿಂದ ಹೊಟ್ಟೆ ಬಗೆದು ಕೊಲೆ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದ್ದ ಶಾಸಕ ಮುನಿರತ್ನ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರೊಬ್ಬರಿಗೆ ಜಾತಿ ಹೆಸರಿನಲ್ಲಿ ನಿಂದಿಸಿ ಅವಹೇಳನ ಮಾಡಿದ್ದಾರೆ. ಇದು ದೃಢಪಟ್ಟಿದ್ದು ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಅವರು ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು .
ಸಂಘಟನೆಯ ಸಂಸ್ಥಾಪಕ ಶಿವಕುಮಾರ್, ದಲಿತ ಸಂಘರ್ಷ ಸಮಿತಿಯ ಅನಿಲ್ ಕುಮಾರ್, ನರಸಿಂಹಮೂರ್ತಿ, ಬಸರಾಳು ಶ್ರೀನಿವಾಸ್ ಸೇರಿದಂತೆ ಇತರರಿದ್ದರು.