ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರು ಗಂಗಾನಗರದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಆರಂಭಿಸಿದ್ದ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಕ್ತಾಯಗೊಳಿಸಲಾಗಿತ್ತು. ಆ ಭೂಮಿಯನ್ನು ಡಿನೋಟಿಫೈ ಮಾಡಿ ಸ್ವತಃ ಯಡಿಯೂರಪ್ಪ ಅವರೇ ಆದೇಶ ಹೊರಡಿಸಿದ್ದರು.
ಈ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಯಡಿಯೂರಪ್ಪ ಅವರೇ ಎ1 ಆರೋಪಿಯೂ ಆಗಿದ್ದಾರೆ. ಅವರಿಗೆ, ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಶನಿವಾರ ಬೆಳಗ್ಗೆ ಸಮನ್ಸ್ ನೀಡಿತ್ತು. ಶನಿವಾರ ಮಧ್ಯಾಹ್ನವೇ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಈಗ, ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಲ್ಲಿ ತನಿಖಾಧಿಕಾರಿಗಳ ಎದುರು ಹಾಜರಾಗಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮಗದುಂ ಅವರು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಎಲ್ಲರೂ ಮರೆತು ಹೋಗಿದ್ದ ಈ ಹಗರಣವನ್ನು ದಾಖಲೆಗಳ ಸಮೇತ ಈದಿನ.ಕಾಮ್ ಬಯಲಿಗೆಳಿದಿದೆ. ಈ ಬೆನ್ನಲ್ಲೇ, ಹಗರಣದ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಚುರುಕುಗೊಳಿಸಿದ್ದರು.
2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.