ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದೇ ರೀತಿ ಮುಂದುವರೆದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಹಾಗೂ ಒಕ್ಕಲಿಗರ ಸೇವಾ ಟ್ರಸ್ಟ್ ರಾಜ್ಯ ಉಪಾಧ್ಯಕ್ಷ ಎಲ್.ಕೃಷ್ಣ ಎಚ್ಚರಿಕೆ ನೀಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಕ್ಕಲಿಗ ಸಮುದಾಯ ನೆಲ ,ಜಲ, ಭಾಷೆಯ ಬಗ್ಗೆ ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಅವಮಾನಕಾರಿಯಾಗಿ ಹೇಳಿಕೆ ನೀಡಿದ್ದಾರೆ, ಸಮುದಾಯಕ್ಕೆ ಧಕ್ಕೆಯಾಗುವ ರೀತಿ ಹೇಳಿಕೆ ನೀಡಿರುವುದು, ಮಹಿಳೆಯರ ಬಗ್ಗೆ ಅವ ಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಇದೇ ರೀತಿ ಮಾತನಾಡಿದರೆ ಪ್ರತಿಭಟನೆ ನಡೆಸಿ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದರು.
ರಾಜ್ಯಪಾಲರು ಮುನಿರತ್ನ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಪ್ರತಿಭಟನೆ ನಡೆಸಲಾಗುವುದು. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ರಾಜಕೀಯ ನಾಯಕರು ಪಕ್ಷಾತೀತವಾಗಿ ಮಾತನಾಡಬೇಕು. ಮುನಿರತ್ನ ಹೇಳಿಕೆಯನ್ನು ಖಂಡಿಸಬೇಕು ಎಂದು ಹೇಳಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ರವೀಂದ್ರ ಮಾತನಾಡಿ, ನೆಲ ,ಜಲ, ಭಾಷೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಖಂಡನೀಯ. ಜಾತಿ ಜಾತಿ ನಡುವೆ ವೈಷಮ್ಯದಿಂದ ಮಾತನಾಡಿರುವುದು ಅಕ್ಷಮ್ಯ ಎಂದರು.
ಮಹಿಳಾ ಘಟಕದ ಅಧ್ಯಕ್ಷ ಸುಜಾತ ಕೃಷ್ಣ ಮಾತನಾಡಿ, ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಮುಂದೆ ಯಾರೇ ಆದರೂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಖಂಡಿಸುತ್ತೇವೆ ಎಂದರು.
ಗೋಷ್ಠಿಯಲ್ಲಿ ಎಂ.ಕೆ.ಕುಮಾರ್, ಕೃಷ್ಣೇಗೌಡ, ಜಿನೇಂದ್ರ, ಬಸವರಾಜು ಉಪಸ್ಥಿತರಿದ್ದರು.