ರಾಜ್ಯದಲ್ಲಿನ ಶೇಕಡ 70ರಷ್ಟು ಜನ ಸಮೂಹಕ್ಕೆ ಸೇವೆ ಒದಗಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಠಾವಧಿ ಹೋರಾಟ ನಡೆಸಲಿದ್ದಾರೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ವತಿಯಿಂದ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಕ್ ತನ್ವಿರ್ ಆಸಿಫ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.
ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳು ಗ್ರಾಮ ಪಂಚಾಯತಿ ಎಲ್ಲಾ ನೌಕರರು, ಪಿ.ಡಿ.ಓ,ಕರವಸೂಲಿಗಾರರು, ಜಲಗಾರರು, ಕಛೇರಿ ಸಹಾಯಕರು, ಸ್ವಚ್ಛತಾಗಾರರು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
ಪಂಚಾಯತ್ ರಾಜ್ ನೌಕರರು, ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವ್ಯವಸ್ಥೆ, ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದಿದ್ದರೂ, ಇದುವರೆವಿಗೂ ಯಾವುದೇ ಮನವಿಗಳಿಗೂ ಸ್ಪಂದಿಸದೇ ಎಲ್ಲ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ ಎಂದು ದೂರಿದರು.
ಅಕ್ಟೋಬರ್ 4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಯ ಸೇವೆಗಳಾದ ಬಾಪೂಜಿ ಕೇಂದ್ರ ಸೇವೆ ಹಾಗೂ ಕಛೇರಿಯ ಎಲ್ಲಾ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸು ವುದನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೈಗೊಳ್ಳುತ್ತಿದ್ದೇವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಕಾಧ್ಯಕ್ಷ ಟಿ.ಎ.ಪ್ರಶಾಂತ್ ಬಾಬು,
ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್.ಪಿ. ಆರ್.ಮಂಜುನಾಥ್. ಪಿಡಿಒ ಸಂಘದ ತಾಲೂಕು ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಪವಿತ್ರ, ಅನಿತಾ, ರಾಜೇಶ್ವರಿ, ಕೋಮಲಾ, ಮೊದಲಾದವರು ಹಾಜರಿದ್ದರು.