ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅಸ್ವಸ್ಥರಾದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಚೇತರಿಕೆ ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಸಾಯುವುದಿಲ್ಲ” ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಪ್ರಚಾರದ ಕೊನೆಯ ದಿನದಂದು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಖರ್ಗೆ ಅವರಿಗೆ ತಲೆ ಸುತ್ತುವ ಅನುಭವವಾಯಿತು. ಕೂಡಲೇ ಎಚ್ಚೆತ್ತುಕೊಂಡ ಅವರ ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಮುಖಂಡರು, ಖರ್ಗೆ ಅವರ ನೆರವಿಗೆ ಧಾವಿಸಿ ಅವರನ್ನು ಕುರ್ಚಿಗೆ ಕರೆದೊಯ್ದರು.
ಕೆಲವು ನಿಮಿಷಗಳ ನಂತರ, ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ನಾವು ಹೋರಾಡುತ್ತೇವೆ. ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಜೀವಂತವಾಗಿರುತ್ತೇನೆ” ಎಂದರು.
ಮೂಲಗಳ ಪ್ರಕಾರ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಅವರು ಹೆಚ್ಚು ಉತ್ತಮವಾಗಿದ್ದರೂ, ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರದ ಜಸ್ರೋಟಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಸ್ವಲ್ಪ ಅಸ್ವಸ್ಥರಾಗಿದ್ದರು. ವೈದ್ಯಕೀಯ ತಂಡವು ಅವರನ್ನು ಪರೀಕ್ಷಿಸಿದೆ. ಸ್ವಲ್ಪ ಕಡಿಮೆ ರಕ್ತದೊತ್ತಡವನ್ನು ಹೊರತುಪಡಿಸಿ, ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲರ ಕಾಳಜಿಗೆ ಅತ್ಯಂತ ಕೃತಜ್ಞ. ಅವರ ಸಂಕಲ್ಪ, ಜನರ ಶುಭ ಹಾರೈಕೆಗಳು ಅವನನ್ನು ಬಲವಾಗಿ ಇಡುತ್ತವೆ” ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Congress President Sri @kharge felt slightly unwell while addressing a public meeting in Jasrota, Jammu & Kashmir.
He has been checked upon by his medical team and apart from slightly low blood pressure, he is doing well.
Extremely grateful for everyone’s concern.His…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 29, 2024
“>
ಅಕ್ಟೋಬರ್ 1 ರಂದು ಕೊನೆಯ ಮತ್ತು ಅಂತಿಮ ಹಂತದ ಮತದಾನ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಪ್ರಚಾರದ ಕೊನೆಯ ದಿನವಾಗಿದೆ.