Sunday, October 20, 2024

ಪ್ರಾಯೋಗಿಕ ಆವೃತ್ತಿ

ಜಿ.ಟಿ.ದೇವೇಗೌಡ ಬೇರೆ ಪಕ್ಷದಲ್ಲಿದ್ದರೂ ಸತ್ಯವನ್ನೇ ನುಡಿದಿದ್ದಾರೆ ; ಸಿಎಂ ಸಿದ್ದರಾಮಯ್ಯ

ಹಿರಿಯ ರಾಜಕಾರಣಿ ಹಾಗೂ ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು. ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

“>

 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿರುವ ಅನೇಕ ನಾಯಕರಿಗೆ ಜಿ.ಟಿ.ದೇವೇಗೌಡರು ಹೇಳಿರುವ ಸತ್ಯ ಗೊತ್ತಿದೆ. ಆದರೆ ತಮ್ಮ ಪಕ್ಷದ ಕೆಲವು ಹಿರಿಯ ನಾಯಕರ ಒತ್ತಡಕ್ಕೆ ಬಲಿಯಾಗಿ ಮೌನವಾಗಿದ್ದಾರೆ. ಅವರು ಕೂಡಾ ಮುಕ್ತವಾಗಿ ಮಾತನಾಡಬೇಕಾದ ಕಾಲ ಸನ್ನಿಹಿತವಾಗಿದೆ. ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನ: ಸುಳ್ಳು ಆರೋಪಗಳ ಮೂಲಕ ಹೆಣೆಯುವ ರಾಜಕೀಯ ಷಡ್ಯಂತ್ರದಿಂದ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕೆಟ್ಟ ಪರಂಪರೆಯನ್ನು ತಡೆಗಟ್ಟಬೇಕಾದರೆ ನಮ್ಮ ರಾಜಕೀಯ ನಾಯಕರೆಲ್ಲರೂ ಪಕ್ಷಾತೀತವಾಗಿ ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವ ಧೈರ್ಯ ಮಾಡಬೇಕಾಗುತ್ತದೆ. ಈ ಮೂಲಕ ಕರ್ನಾಟಕದಿಂದ ಹೊಸ ರಾಜಕೀಯ ಪರಂಪರೆಗೆ ನಾಂದಿ ಹಾಡಬೇಕಾಗುತ್ತದೆ. “ಸತ್ಯಮೇವ ಜಯತೆ” ಎಂದು ಸಿದ್ಧರಾಮಯ್ಯ ಎಕ್ಸ್‌ ನಲ್ಲಿ ಬರೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!