ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಸದಸ್ಯರು, ಅಧಿಕಾರಿಗಳು ಮತ್ತು ನೌಕರರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರವು ಒಂದೆರಡು ದಿನದಲ್ಲಿ ಸ್ಪಂದಿಸದಿದ್ದರೆ ವಿಜಯದಶಮಿ ದಿನದಂದು ಹೆದ್ಧಾರಿ ತಡೆ ನಡೆಸಬೇಕಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
ಮಂಡ್ಯ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಪಕ್ಕದ ಆವರಣದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿ ರುವ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ನಾಡಹಬ್ಬ ದಸರೆಯ ಸಂದರ್ಭದಲ್ಲಿ ಸರ್ಕಾರಿ ನೌಕರರು ಕಳೆದ 6 ದಿನಗಳಿಂದ ಬೀದಿಯಲ್ಲಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕೂಡಲೇ ಸರ್ಕಾರ ಸ್ಪಂದಿಸಬೇಕಿತ್ತು. ಇದುವರೆಗೆ ಸ್ಪಂದಿಸಿಲ್ಲ, ಒಂದೆರಡು ದಿನದಲ್ಲಿ ನೌಕರರ ಸಂಘದ ಪದಾಧಿಕಾರಿಗಳನ್ನು ಕರೆದು ಮಾತುಕತೆ ನಡೆಸಿ ಭರವಸೆ ನೀಡದೇ ಇದ್ದರೆ ಹೆದ್ದಾರಿ ತಡೆ ಮಾಡಬೇಕಾಗುತ್ತದೆ ಎಂದರು.
ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದ್ದರೂ ಸಹ ಇಲಾಖಾ ಸಚಿವರು ಈವರೆಗೆ ಪ್ರತಿಭಟನಾನಿರತ ನೌಕರರನ್ನು ಭೇಟಿಯಾಗುವ ಸೌರ್ಜನ್ಯ ತೋರದೆ ಭಂಡತನ ಪ್ರದಶಿಸುತ್ತಿದ್ದಾರೆ, ಸರ್ಕಾರಕ್ಕೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದ ಅವರು, ಕೂಡಲೇ ಸರ್ಕಾರ ನೌಕರರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮನ್ ಮುಲ್ ಉಪಾಧ್ಯಕ್ಷ ರಘುನಂದನ್, ಮುಖಂಡ ಬಿ.ಆರ್.ಸುರೇಶ್, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತದ್ದರು.