ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ.
ನವೆಂಬರ್ 23 ರಂದು ಮತಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕ ಉಪ ಚುನಾವಣೆ ಕುರಿತು ಅಕ್ಟೋಬರ್ 18ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚೆನ್ನಪಟ್ಟಣದ ಸ್ಥಾನ ತೆರವಾಗಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಇ ತುಕರಾಂ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಇ ತುಕರಾಂ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಹೀಗಾಗಿ ತುಕರಾಂ ತಮ್ಮ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆದ್ದು ಇದೀಗ ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಚೆನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಶಿಗ್ಗಾಂವಿ ಕ್ಷೇತ್ರದಿಂದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಸಭಾ ಚುನಾವಣೆ ವೇಳೆ ಹಾವೇರಿ ಕ್ಷೇತ್ರದಿಂದ ಗೆದ್ದ ಸಂಸದರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಶಿಗ್ಗಾಂವಿ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂರು ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಇದೀಗ ಚುನಾವಣೆ ಘೋಷಣೆಯಾಗಿದೆ.