ನವೆಂಬರ್ ೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಬಹುತೇಕ ಕನ್ನಡ ವ್ಯಾಪಾರಸ್ಥರಾಗಿದ್ದು, ತಾವು ನೆಲೆಸಿರುವ ಕನ್ನಡ ನೆಲ ಜಲದ ಮೇಲೆ ಗೌರವವನ್ನು ಹೊಂದಿರಬೇಕು. ಮಂಡ್ಯ ಜಿಲ್ಲೆ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲಾ ಕನ್ನಡಿಗರು ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಧ್ವಜ ಹಾರಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.
ಆಟೋ ಚಾಲಕರು ತಮ್ಮ ಆಟೋಗಳನ್ನು ಸಿಂಗರಿಸಿ, ಧ್ವಜ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸ್ವಾಭಿಮಾನದಿಂದ ಆಚರಿಸುತ್ತಾರೆ. ಅವರು ನಿಜವಾದ ಕನ್ನಡ ಅಭಿಮಾನಿಗಳು. ಅವರಂತೆಯೇ ಎಲ್ಲರೂ ತಮ್ಮ ಮನೆ, ಮಳಿಗೆ ಬಳಿ ಕನ್ನಡ ಧ್ವಜ ಹಾರಿಸಿ ಸ್ವಾಭಿಮಾನದಿಂದ ಕ್ನನಡ ಅಭಿಮಾನ ವ್ಯಕ್ತಪಡಿಸುವಂತೆ ಕರೆ ನೀಡಿದರು.
ನವೆಂಬರ್ ೦೧ರಂದು ಸರ್ಕಾರಿ ಅಧಿಕಾರಿಗಳು ಕೇವಲ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಲಸ್ಟೇ ಕಛೇರಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತದಿಂದ ಆದೇಶ ಬಂದರೆ ಮಾತ್ರ ಕನ್ನಡ ಧ್ವಜ ಹಾರಿಸುವ ಕೆಲಸಕ್ಕೆ ಮುಂದಾಗುತ್ತಾರೆ. ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ಕನ್ನಡ ಧ್ವಜ ಹಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಶೇ.೬೦ರಷ್ಟು ಕನ್ನಡ ಫಲಕ ಬಳಸಲೇಬೇಕು ಎಂದು ಹೈಕೋರ್ಟ್ ತೀರ್ಪು ನೀಡಿರುವುದನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಸ್ವಾಗತಿಸುತ್ತದೆ ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸಂಚಾಲಕ ಆರಾದ್ಯ ಗುಡುಗನಹಳ್ಳಿ, ಜಿಲ್ಲಾ ಸಂಚಾಲಕ ಸಲ್ಮಾನ್ ಇದ್ದರು.