ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗಲಿದ್ದು, ಪ್ರತಿಯೊಬ್ಬರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸಬೇಕು ಎಂದು ಕ್ರೀಡಾ ಹಾಗೂ ರೇಷ್ಮೆ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರು ಹೇಳಿದರು.
ಕೆ.ಆರ್.ಪೇಟೆ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗವಿರುವ ಶಂಕರ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ಅಂತರ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಫೈನಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾ ಖಾತೆಯ ಸಚಿವನಾಗಿ ಕ್ರೀಡೆಯಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಲು ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇನೆ. ರಾಷ್ರೀಯ ಕ್ರೀಡಾ ಕೂಟಗಳನ್ನು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಆಯೋಜಿಸುವ ಮೂಲಕ ಯುವಕರಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಯುವಂತೆ ನೋಡಿಕೊಂಡಿದ್ದೇನೆ.
ಕ್ರೀಡಾಪಟುಗಳಿಗೆ ಮಾಸಿಕ ಪಿಂಚಣಿಯನ್ನು ಹೆಚ್ಚಿಸಿ ನೀಡುವ ವ್ಯವಸ್ಥೆ ಮಾಡಿದ್ದೇನೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ನಗದು ಪುರಸ್ಕಾರ ನೀಡಲು ಕ್ರಮ ಕೈಗೊಂಡಿದ್ದೇನೆ. ಈ ಮೂಲಕ ಕ್ರೀಡಾ ಖಾತೆಯ ಜನಪ್ರಿಯತೆಯನ್ನು ಹೆಚ್ಚಿಸಿ ಬೇಡಿಕೆಯ ಖಾತೆಯನ್ನಾಗಿಸಿದ್ದೇನೆ ಎಂದರು.
ತಾಲ್ಲೂಕು ಕ್ರೀಡಾಂಗಣಗಳು, ಜಿಲ್ಲಾ ಕ್ರೀಡಾಂಗಣಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಕ್ರೀಡೆಗಳ ಅಭಿವೃದ್ಧಿಗೂ ಆದ್ಯತೆ ನೀಡುವ ಮೂಲಕ ಗ್ರಾಮೀಣ ಮಕ್ಕಳೂ ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕ್ರೀಡಾ ಅಂಕಣ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಜಿ.ಪಂ.ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಬಿಜೆಪಿ ಮುಖಂಡರಾದ ಡಿಪಿ ಪರಮೇಶ್, ಮನ್ಮುಲ್ ನಿರ್ದೇಶಕ ಹೆಚ್.ಟಿ. ಮಂಜು, ತಾ.ಪಂ.ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಗಿರೀಶ್, ಶಂಕರ್ ಸ್ಪೋರ್ಟ್ಸ್ ಅಕಾಡೆಮಿಯ ಮಾಲೀಕರಾದ ಕೆ.ಟಿ.ಶಂಕರ್, ದೀಪಿಕಾಶಂಕರ್, ಪಿ. ಪ್ರವೀಣ್,ಶರತ್,ನಾಗೇಶ್, ಮಂಜುನಾಥ್,ದೇವೇಂದ್ರ, ಅರುಣ್, ಪ್ರಸನ್ನ, ನಾಗರಾಜು, ಜ್ಞಾನೇಶ್,ಧರಣಿ ಸೇರಿದಂತೆ ಮತ್ತಿತರರಿದ್ದರು.