ಜುಲೈ ಅಂತ್ಯದೊಳಗೆ ಮೈಷುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಆಗಸ್ಟ್ ಎರಡನೇ ವಾರದಲ್ಲಿ ಪುನಾರಂಭ ಮಾಡುವಂತೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರೊಂದಿಗೆ ಮೈಶುಗರ್ ಕಾರ್ಖಾನೆಗೆ ಭೇಟಿ ನೀಡಿ ದುರಸ್ತಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.
ಮೈಶುಗರ್ ಕಾರ್ಖಾನೆ ಮಂಡ್ಯ ರೈತರ ಜೀವನಾಡಿಯಾಗಿದ್ದು, ಆದಷ್ಟು ಬೇಗ ಕಾರ್ಖಾನೆ ಆರಂಭವಾಗಿ ಕಬ್ಬು ಅರೆಯಬೇಕು ಎಂಬುದು ಮಂಡ್ಯ ಜಿಲ್ಲೆಯ ರೈತರ ಕನಸು.ಹಾಗಾಗಿ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯಗಳನ್ನು ನಡೆಸಿ, ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಬೇಕು.ಏನೇ ಆದರೂ ಆಗಸ್ಟ್ ಎರಡನೇ ವಾರದಲ್ಲಿ ಕಾರ್ಖಾನೆ ಆರಂಭವಾಗಿ ಕಬ್ಬು ಅರೆಯಬೇಕೆಂದು ಸೂಚಿಸಿದರು.
ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ನಮ್ಮ ಸರ್ಕಾರದ ಇಚ್ಛಾಶಕ್ತಿಯೇ ಕಾರಣ. ಅದಕ್ಕೆ ಅಗತ್ಯವಿರುವ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ.ಹಾಗಾಗಿ, ಜುಲೈ ಅಂತ್ಯದೊಳಗೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ ಪಾಟೀಲ್,ಜಿಲ್ಲಾಧಿಕಾರಿ ಅಶ್ವತಿ,ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ,ಯುವ ನಾಯಕ ಇಂಡುವಾಳು ಸಚ್ಚಿದಾನಂದ, ಬಿಜೆಪಿ ಮುಖಂಡರಾದ ಚಂದಗಾಲು ಶಿವಣ್ಣ, ಹೊಸಹಳ್ಳಿ ನಾಗೇಶ್ ಸೇರಿದಂತೆ ಹಲವರಿದ್ದರು.