ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜುಲೈ 21 ರಂದು ಕೆ.ಆರ್.ಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಶ್ವತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರಿಂದು ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಕಾರ್ಯನಿರ್ವಹಿಸಿ. ಅಧಿಕಾರಿಗಳಿಗೆ ವಹಿಸಲಾಗುವ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.
ಅಧಿಕಾರಿಗಳು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಿದ್ಧವಿರುವ ಕಾಮಗಾರಿಗಳು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಿದ್ಧವಿರುವ ಕಾಮಗಾರಿಗಳ ವಿವರವನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು ಎಂದರು.
ಮಹಿಳಾ ಸಂಘಗಳಿಗೆ ಸಹಾಯಧನ, ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆಯಿಂದ ರೈತರಿಗೆ ನೀಡಲಾಗುವ ಸಹಾಯಧನ ಬಹಳಷ್ಟು ಯೋಜನೆಗಳಿವೆ. ಅವುಗಳಲ್ಲಿ ಉತ್ತಮವಾದ ಯೋಜನೆಯ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು. ಇದರೊಂದಿಗೆ ಆರೋಗ್ಯ ಇಲಾಖೆಯಿಂದ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ನೀಡಲು ಆಯುಷ್ಮಾನ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದ್ದು, ಅವುಗಳ ವಿತರಣೆಗೂ ಸಹ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರ್ ರೂಪಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.