ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ನಾಯಕಿ ಡಾ. ಲಕ್ಷ್ಮಿ ಅಶ್ವಿನ್ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಆದ್ಯತೆ ವಿಧಾನ ಸಭಾ ಚುನಾವಣೆ ಆಗಿದೆ. ಬಿಜೆಪಿ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿದ್ದು, ಪಕ್ಷದ ಸಿದ್ಧಾಂತದಲ್ಲಿ ನನಗೆ ನಂಬಿಕೆಯಿದೆ. ಮಂಡ್ಯ ಕ್ಷೇತ್ರದಿಂದ ಬಿಜೆಪಿ ಪಕ್ಷ ಅವಕಾಶ ನೀಡಿದರೆ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧಳಿದ್ದೇನೆ ಎಂದು ತಿಳಿಸಿದರು.
29 ರಂದು ಉದ್ಯೋಗ ಮೇಳ
ಅಂಜನಿ ಫೌಂಡೇಷನ್ ವತಿಯಿಂದ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಆ.29ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಸುಮಾರು 140ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗಿಗಳು ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
5 ಸಾವಿರ ನಿರುದ್ಯೋಗಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ಪ್ರತಿಷ್ಠಿತ ಕಂಪನಿಗಳು ನಡೆಸುವ ಸಂದರ್ಶನದಲ್ಲಿ ಸುಮಾರು 1500 ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ನಡೆದಿರುವ ಉದ್ಯೋಗ ಮೇಳದಲ್ಲಿ ಸುಮಾರು 600ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ನಿರುದ್ಯೋಗಿಗಳಿಗೆ ಕುಟುಂಬದ ಆರ್ಥಿಕ ಸುಸ್ಥಿರತೆ ಕಾಪಾಡಲು ಈ ಉದ್ಯೋಗ ಮೇಳ ನೆರವಾಗಲಿದೆ. ಉದ್ಯೋಗ ಮೇಳದಲ್ಲಿ 8ನೇ ತರಗತಿ ಉತ್ತೀರ್ಣರಾದವರಿಂದ ಹಿಡಿದು ಉನ್ನತ ಪದವೀಧರರಿಗೂ ಭಾಗವಹಿಸಲು ಅವಕಾಶವಿದೆ ಎಂದು ಹೇಳಿದರು.
ಫೌಂಡೇಷನ್ ವತಿಯಿಂದ ಮಹಿಳಾ ಸಬಲೀಕರಣ ಕೌಶಲ್ಯ ಅಭಿವೃದ್ಧಿ ಯೋಜನೆಗಳಿಗೆ ಉತ್ತೇಜನ ನೀಡಿ ಪ್ರೋತ್ಸಾಹಿಸುವ ಗುರಿ ಹೊಂದಲಾಗಿದೆ. ಅಗ್ನಿಪಥ್ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಿಗೆ ನುರಿತ ತಜ್ಞರಿಂದ ಉಚಿತ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಅಗ್ನಿಪಥ್ ಯೋಜನೆ ರಾಷ್ಟ್ರಪ್ರೇಮ ಬೆಳೆಸುವ ಯೋಜನೆಯಾಗಿದ್ದು, ಯುವ ಸಮುದಾಯ ಶಿಸ್ತು ಬದ್ಧ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಎಎಸ್ ಹಾಗೂ ಐಎಎಸ್ ಪರೀಕ್ಷೆಗಳಿಗೆ ತರಬೇತಿ ಕೇಂದ್ರ ತೆರೆಯುವ ಉದ್ದೇಶ ಹೊಂದಲಾಗಿದೆ ಎಂದರು.
ಮಂಡ್ಯ ತೊರೆದಿರುವ ಯುವಕರಿಗೆ ಮತ್ತು ಯುವತಿಯರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸಲು ಆದ್ಯತೆ ನೀಡಲಾಗುವುದು ಎಂದರು.
ಉಚಿತ ತಪಾಸಣಾ ಶಿಬಿರ:
ಫೌಂಡೇಷನ್ ವತಿಯಿಂದ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು. ಈ ಸಂಬಂಧವಾಗಿ ಈಗಾಗಲೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳನ್ನು ಸಂಪರ್ಕಿಸಲಾಗಿದೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.