ಜಿಲ್ಲೆಯಲ್ಲಿ ದೇವರಾಜ ಅರಸು ರವರ 107 ನೇ ಜನ್ಮದಿನಾಚರಣೆ ಆಗಸ್ಟ್ 20,21,22 ರಂದು ಮೂರು ದಿನಗಳಂದು ನಡೆಯುವುದರಿಂದ ಅರ್ಥಪೂರ್ಣವಾಗಿ ಆಚರಿಸೋಣ. ಕಾರ್ಯಕ್ರಮಕ್ಕೆ ಬೇಕಾದಂತಹ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳು ಸಹಕರಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜ ಅರಸು ರವರ 107 ನೇ ಜನ್ಮದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೇದಿಕೆ ಕಾರ್ಯಕ್ರಮವು ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ (ಕಲಾಮಂದಿರದಲ್ಲಿ) ಆಯೋಜಿಸಲಾಗಿದೆ ಎಂದರು.
ಆ.20 ರಂದು ಡಿ. ದೇವರಾಜ ಅರಸು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ಕಲಾಮಂದಿರದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಒಳಗೊಂಡಂತೆ ಮೆರವಣಿಗೆಯನ್ನು ಮಾಡಲಾಗುವುದು ನಂತರ ವೇದಿಕೆ ಕಾರ್ಯಕ್ರಮ ನಡೆಯದೆ. ಡಿ.ದೇವರಾಜ ಅರಸು ರವರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಸಹ ನಡೆಯಲಿದೆ ಎಂದರು.
ಆ.21 ರಂದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಡಿ ದೇವರಾಜ ಅರಸು ರವರ ಕುರಿತಂತೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಕ್ರೀಡೆ ನಡೆಸಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕರಿಸುವಂತೆ ತಿಳಿಸಿದರು.
ಆ.22 ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವ ಬಗ್ಗೆ ತಿಳುವಳಿಕೆ ಮತ್ತು 107 ಗಿಡ ನೆಡುವ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸಲಹೆ ನೀಡಿದರು. ಡಿ.ದೇವರಾಜ ಅರಸು ರವರ ಸಾಧನೆ ಮತ್ತು ಅವರ ಕೊಡುಗೆ ಕುರಿತು ಸಾಕ್ಷಚಿತ್ರಗಳ ಪ್ರದರ್ಶನ ಮಾಡಿ ಎಂದು ಹೇಳಿದರು.
ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಡಿ ದೇವರಾಜ ಅರಸು ರವರ ಕುರಿತಂತೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪದಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ.ಸಿಇಒ ಶಾಂತ ಎಂ. ಹುಲ್ಮನಿ, ಉಪ ಅರಣ್ಯಸಂರಕ್ಷಣಾಧಿಕಾರಿ ರುದ್ರೆನ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್.ರಾಜಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಎನ್. ಉದಯ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.