ರೈತರಿಗೆ ಅನುಕೂಲಕರವಾಗಿರುವ ಮೈಷುಗರ್ ಕಾರ್ಖಾನೆ ಸರ್ಕಾರದ ವ್ಯಾಪ್ತಿಯಲ್ಲಿ ಲಾಭದಾಯಕವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೇಷ್ಮೆ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ ಅವರೊಂದಿಗೆ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದು ಕಬ್ಬು ನುರಿಸುವ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ. ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗುವ ಸಾಧ್ಯತೆಯಿದ್ದು, ಅವುಗಳನ್ನು ಸರಿಪಡಿಸಿ ಕಾರ್ಖಾನೆ ನಡೆಸಿಕೊಂಡು ಹೋಗುತ್ತೇವೆ. ಮುಂದಿನ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಸಹ ಮೈಷುಗರ್ ಕಾರ್ಖಾನೆಗೆ ಕರೆಸಿ ಮತ್ತೊಮ್ಮೆ ಚಾಲನೆ ನೀಡಲಾಗುವುದು ಎಂದರು.
ಮೈಷುಗರ್ ಕಾರ್ಖಾನೆ ಪುನಾರಾರಂಭಕ್ಕೆ ಶ್ರಮಿಸಿದ ಮಾನ್ಯ ಮುಖ್ಯಮಂತ್ರಿಗಳು, ಚುನಾಯಿತ ಪ್ರತಿನಿಧಿಗಳು, ರೈತ ಸಂಘದವರು, ರೈತ ಹಿತರಕ್ಷಣಾ ಸಮಿತಿ ಹಾಗೂ ರೈತರಿಗೆ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.
ಈ ಭಾಗದ ರೈತರಿಗೆ ಹೆಚ್ಚು ಉಪಯುಕ್ತವಾಗುವ ಸಕ್ಕರೆ ಕಾರ್ಖಾನೆ ಅತ್ಯುತ್ತಮವಾಗಿ ನಡೆಯಬೇಕು. 4000 ಟನ್ ಕಬ್ಬು ನುರಿಸುವ ನಿರೀಕ್ಷೆ ಹೊಂದಲಾಗಿದ್ದು, ಹೊಸ ಕಾರ್ಖಾನೆಯ ರೀತಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್, ಶಾಸಕ ಎಂ. ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವತಿ,ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳೀಗೌಡ,ಮಧು ಜಿ.ಮಾದೇಗೌಡ, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ,ರೈತನಾಯಕಿ ಸುನಂದಾ ಜಯರಾಂ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.