-
ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆ ಎದುರು ಕರವೇ ಪ್ರತಿಭಟನೆ
- ಕೇಂದ್ರ ಸರ್ಕಾರದ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ಒತ್ತಾಯ
ಕೇಂದ್ರ ಸರ್ಕಾರವು ರಾಜ್ಯದಲ್ಲಿ ಹಿಂದಿ ದಿವಸ ಆಚರಣೆ ಮಾಡುವ ಮೂಲಕ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಮಂಡ್ಯನಗರದಲ್ಲಿ ಕರಾಳ ದಿನ ಆಚರಣೆ ಮಾಡಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಿಂದ ಪ್ರತಿಭಟನಾ ಮೆರವಣೆಗೆ ಹೊರಟ ಕರವೇ ಕಾರ್ಯಕರ್ತರು, ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ದ ಘೋಷಣೆಗಳನ್ನು ಕೂಗಿದರು.
ನಂತರ ಜಿಲ್ಲಾಧಿಕಾರಿ ಕಚೇರಿ ಸಮೀಪದ ಆದಾಯ ತೆರಿಗೆ ಇಲಾಖೆ ಎದುರು ಜಮಾಯಿಸಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಮು ಮಾತನಾಡಿ, 1949ರ ಸೆ.14ರಂದು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಸಮ್ಮತಿ ಇಲ್ಲದೇ ಹಿಂದಿಯನ್ನು ಆಡಳಿತ ಭಾಷೆಯನ್ನಾಗಿ ಘೋಷಿಸಿಕೊಂಡಿತು. ಇದರಡಿ ರಾಜಭಾಷಾ ಕೀರ್ತಿ ಪುರಸ್ಕಾರ ನೀಡುತ್ತಿದ್ದು, ಇದನ್ನು ಕನ್ನಡಿಗರು ತಿರಸ್ಕರಿಸಬೇಕು ಎಂದು ಹೇಳಿದರು.
ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಕೇಂದ್ರ ಸರ್ಕಾರಗಳು ಬಲವಂತವಾಗಿ ಹಿಂದಿಯನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ, ಇದನ್ನು ಯಾವುದೇ ಕಾರಣಕ್ಕೂ ಕನ್ನಡಿಗರು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಆರ್ಟಿಕಲ್ 343 ರಿಂದ 351ರ ವರೆಗೆ ತಿದ್ದುಪಡಿ ಮಾಡಿ ಹಿಂದಿ ಮತ್ತು ಸಂಸ್ಕೃತ ಭಾಷೆಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ತೆಗೆಯಬೇಕು, ಕೇಂದ್ರ ಸರ್ಕಾರದ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕು ಹಾಗೂ ಹಿಂದಿ ದಿವಸ ಆಚರಣೆಯನ್ನು ರದ್ಧುಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳಾದ ಟಿ.ಕೆ.ಸೋಮಶೇಖರ್, ಮುದ್ದೇಗೌಡ, ಮಹೇಂದ್ರ ಹಾಗೂ ಆರ್.ಶಂಕರ್ ಭಾಗವಹಿಸಿದ್ದರು.