ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಕೆ ಎಸ್ ರಾಜಣ್ಣ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದಿರುವ ಡಾ.ಮೀರಾ ಶಿವಲಿಂಗಯ್ಯ ಅವರಿಗೆ ನಾಗರಿಕ ಅಭಿನಂದನಾ ಸಮಾರಂಭವನ್ನು ಜೂ.22 ರಂದು ಮಧ್ಯಾಹ್ನ 2.30 ಗಂಟೆಗೆ ಮಂಡ್ಯ ನಗರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಕೆ ಟಿ ಹನುಮಂತು ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆ.ಎಸ್.ರಾಜಣ್ಣ ಅವರು ಮದ್ದೂರು ತಾಲೂಕಿನ ಕೊಪ್ಪ ಗ್ರಾಮದವರಾಗಿದ್ದು, ಅವರಿಗೆ ಪದ್ಮಶ್ರೀ ಪ್ರಶಸ್ತಿದಕ್ಕಿರುವುದು ಮಂಡ್ಯ ಜಿಲ್ಲೆಗೆ ಸಂದ ಗೌರವವಾಗಿದೆ ಎಂದರು.
ರಾಜಣ್ಣ ಅವರು 11 ತಿಂಗಳ ಮಗುವಾಗಿದ್ದಾಗಲೇ ಪೋಲಿಯೋ ಪೀಡಿತರಾಗಿದ್ದು ಆದರೆ ಛಲ ಬಿಡದೆ ಸಾಧನೆ ಮಾಡಿದ್ದಾರೆ. ವಿಕಲಚೇತನರಿಗಾಗಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ ಎಂದು ನುಡಿದರು.
ಮೀರಾ ಶಿವಲಿಂಗಯ್ಯ ಅವರು ಕೆನಡಾ ದೇಶದಲ್ಲಿ ಕಂಪ್ಯೂಟರ್ ಕಲಿತು, ಅಲ್ಲಿಂದ ಮಂಡ್ಯಕ್ಕೆ ಕಂಪ್ಯೂಟರ್ ತಂದು ಹಲವಾರು ಮಂದಿಗೆ ಪ್ರಯೋಜನವಾಗುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಸಮಾಜದ ಎಲ್ಲಾ ರಂಗದಲ್ಲೂ ಕೆಲಸ ಮಾಡಿದ್ದಾರೆ. ವಿದ್ಯಾದಾನದ ಜೊತೆಗೆ ಅನ್ನದಾನ ಮಾಡುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್ ದೊರೆತಿರುವುದು ಸಂತೋಷದ ವಿಚಾರವಾಗಿದ್ದು, ಹಾಗಾಗಿ ಅವರನ್ನು ಅಭಿನಂದಿಸಲಾಗುತ್ತಿದೆ ಎಂದರು .
ಅಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ವಹಿಸಲಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ. ನಾಡೋಜ ವುಡೇ ಪಿ .ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ್ ಅಭಿನಂದಿತರನ್ನು ಗೌರವಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಶಾಸಕ ಪಿ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾಧಿಕಾರಿ ಡಾ.ಎಚ್ ಎಲ್ ನಾಗರಾಜು, ಚಿಕ್ಕಮಗಳೂರು ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಡಾ.ಎಚ್ ಪಿ ಮಂಜುಳಾ, ಕರ್ನಾಟಕ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಡಾ.ಎಂ.ಎಸ್ ಚಲುವರಾಜು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಉಪಾಧ್ಯಕ್ಷೆ ಸುಜಾತ ಕೃಷ್ಣ, ಮಾಧ್ಯಮ ಕಾರ್ಯದರ್ಶಿ ಡಿ ದೇವರಾಜ ಕೊಪ್ಪ, ಕಾರಸವಾಡಿ ಮಹದೇವು ,ಕೀಲಾರ ಕೃಷ್ಣೆಗೌಡ, ಎಂ ಆರ್ ಮಂಜು, ಎಚ್ಎಸ್ ಮಲ್ಲೇಶ್ ಉಪಸ್ಥಿತರಿದ್ದರು.